ADVERTISEMENT

ಮತಗಟ್ಟೆಗಳಿಗೆ ಮೂಲಸೌಕರ್ಯ: ತಾಕೀತು

ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆ

​ಪ್ರಜಾವಾಣಿ ವಾರ್ತೆ
Published 27 ಮೇ 2018, 9:46 IST
Last Updated 27 ಮೇ 2018, 9:46 IST

ಕಲಬುರ್ಗಿ: ‘ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆಯ ಮತಗಟ್ಟೆಗಳನ್ನು ಆಯಾ ತಾಲ್ಲೂಕಿನ ತಹಶೀಲ್ದಾರರು ಖುದ್ದಾಗಿ ಪರಿಶೀಲಿಸಬೇಕು. ಕನಿಷ್ಠ ಮೂಲಸೌಕರ್ಯ ಒದಗಿಸಿದ ಬಗ್ಗೆ ಎರಡು ದಿನದೊಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.

ಈಶಾನ್ಯ ಪದವೀಧರ ಮತ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ
ದಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ 46 ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ತಾಲ್ಲೂಕು ಕೇಂದ್ರದಲ್ಲಿರುವ ಹಾಗೂ ಆಚೆಗೆ ಇರುವ ಮತಗಟ್ಟೆಗಳಿಗೆ ತಲಾ ಒಬ್ಬ ಸೆಕ್ಟರ್ ಅಧಿಕಾರಿಯನ್ನು ನೇಮಿಸಬೇಕು. ಸೂಕ್ಷ್ಮ ಮತಗಟ್ಟೆಗಳಿಗೆ ಮೈಕ್ರೋ ಆಬ್ಸರ್ವರ್‌ ವ್ಯವಸ್ಥೆ ಬಳಸಬೇಕು ಎಂದರು.

ADVERTISEMENT

ಈಗಾಗಲೇ ಪ್ರತಿ ತಾಲ್ಲೂಕಿಗೊಂದು ಪ್ಲೈಯಿಂಗ್ ಸ್ಕ್ವಾಡ್ ತಂಡ ರಚಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಮೇಲೆ ನಿಗಾವಹಿಸಲು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅವರನ್ನು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ, ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಯನ್ನು ತಾಲ್ಲೂಕಿನ ನೋಡಲ್ ಅಧಿಕಾರಿಗಳನ್ನಾಗಿ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.

ದೂರು ದಾಖಲಿಸಲು ತಂಡ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗುತ್ತಿವೆ. 24 ಗಂಟೆಯೂ ದೂರುಗಳನ್ನು ದಾಖಲಿಸಲು ತಂಡ ರಚಿಸಬೇಕು. ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಜಾಹೀರಾತು ನೀಡಬೇಕಾದಲ್ಲಿ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 21,697 ಮತದಾರರಿದ್ದು, ಮತದಾನವು ಜೂನ್ 8ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮತದಾರರು ಮತಪತ್ರಗಳ ಮೂಲಕ ಪ್ರಾಶಸ್ತ್ಯ ಮತಗಳನ್ನು ಚಲಾಯಿಸುವರು.

ಜೂನ್ 12ರಂದು ಮತ ಎಣಿಕೆಯು ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ನಡೆಯಲಿದೆ. ಮತದಾನ ಮತ್ತು ಮತ ಎಣಿಕೆ ದಿನಗಳಂದು ಸೂಕ್ತ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಪಾಲಿಕೆ ಆಯುಕ್ತ ಪಿ. ರಘುನಂದನಮೂರ್ತಿ, ಎಸ್ಪಿ ಎನ್.ಶಶಿಕುಮಾರ, ಸೇಡಂ ಸಹಾಯಕ ಆಯುಕ್ತ ಡಾ.ಬಿ.ಸುಶೀಲಾ, ಶಿಷ್ಟಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರ, ಚುನಾವಣಾ ಶಾಖೆಯ ಸಂಜೀವಕುಮಾರ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.