ADVERTISEMENT

21ರಂದು ಅಂಬಿಗರ ಚೌಡಯ್ಯ ಜಯಂತ್ಯುತ್ಸವ

​ಪ್ರಜಾವಾಣಿ ವಾರ್ತೆ
Published 19 ಜನವರಿ 2017, 5:41 IST
Last Updated 19 ಜನವರಿ 2017, 5:41 IST

ಕಲಬುರ್ಗಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಜ.21ರಂದು ಮಧ್ಯಾಹ್ನ 2 ಗಂಟೆಗೆ ನಗರದ ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕೋಲಿ (ಗಂಗಾಮತ) ಸಮಾಜದ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೊನಸನಹಳ್ಳಿ ಎಸ್‌. ಮಲ್ಲಣ್ಣಪ್ಪ ಸ್ವಾಮೀಜಿ, ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸಲಿದ್ದು, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ, ಸಂಸದ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುವರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು. ಶಿಕ್ಷಕ ಬಸವರಾಜ ಹೇರೂರ ಉಪನ್ಯಾಸ ನೀಡುವರು ಎಂದು ಹೇಳಿದರು.

ಸಮಾರಂಭಕ್ಕೂ ಮೊದಲು ಮಧ್ಯಾಹ್ನ 12 ಗಂಟೆಗೆ ನಗರದ ನೆಹರೂ ಗಂಜ್‌ನ ನಗರೇಶ್ವರ ಬಾಲವಿಕಾಸ ಮಂದಿರದಿಂದ ಸೂಪರ್‌ಮಾರ್ಕೆಟ್‌ ಮಾರ್ಗವಾಗಿ ಡಾ.ಎಸ್‌.ಎಂ.ಪಂಡಿತ ರಂಗಮಂದಿರದವರೆಗೆ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆ ನಡೆಯಲಿದೆ ಎಂದರು.

ನಿಗಮ ಸ್ಥಾಪಿಸಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪಿಸಿ, ₹200 ಕೋಟಿ ಅನುದಾನ ನೀಡಬೇಕು. ಚೌಡಯ್ಯನವರ ಹೆಸರಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಬೇಕು. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿನ ಅಂಬಿಗರ ಚೌಡಯ್ಯ ಅಧ್ಯಯನ ಪೀಠಕ್ಕೆ ಚಾಲನೆ ನೀಡಿ, ಅವರ ಮೂರ್ತಿ ಸ್ಥಾಪಿಸಬೇಕು. ಜ.30ರೊಳಗೆ ಸ್ಥಾಪಿಸದಿದ್ದಲ್ಲಿ ಧರಣಿ ನಡೆಸಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಸಮಾಜದ ಭವನಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಿಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ರಾಜಗೋಪಾಲರೆಡ್ಡಿ, ಸಾಯಬಣ್ಣ ನೀಲಪ್ಪಗೋಳ, ಮಹಾಂತೇಶ ಪಾಟೀಲ, ಪ್ರಕಾಶ ಜಮಾದಾರ, ತಿಪ್ಪಣ್ಣರೆಡ್ಡಿ, ರಮೇಶ ನಾಟೀಕಾರ, ಲಕ್ಷ್ಮಣ ಹೇರೂರ, ವಸಂತ ನರಬೋಳ, ಡಾ.ಇಂದ್ರಶಕ್ತಿ, ಸೂರ್ಯಕಾಂತ, ಶರಣು, ಹುಲಿಗೆಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.