ADVERTISEMENT

ಆಯುರ್ವೇದ ವೈದ್ಯರ ಭರ್ತಿಗೆ ಕ್ರಮ: ಸಚಿವ

ಸರ್ಕಾರಿ ಆಯುರ್ವೇದ ಮತ್ತು ಹೋಮಿಯೋಪಥಿ ಆಸ್ಪತ್ರೆ ಕಾರ್ಯಾರಂಭ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 11:22 IST
Last Updated 23 ಮಾರ್ಚ್ 2018, 11:22 IST

ಕುಶಾಲನಗರ: ‘ಕೊಡಗು ಜಿಲ್ಲೆಯ ಸರ್ಕಾರಿ ಆಯುರ್ವೇದ ಮತ್ತು ಹೋಮಿಯೋಪಥಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ನೇಮಕಕ್ಕೆ ಕ್ರಮವಹಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಗುರುವಾರ ಹೇಳಿದರು.

ಪಟ್ಟಣದ ಬಿಜಿಎಸ್ ಸರ್ಕಲ್‌ನಲ್ಲಿ ನೂತನ ಸರ್ಕಾರಿ ಆಯುರ್ವೇದ ಮತ್ತು ಹೋಮಿಯೋಪಥಿ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಕಾರ್ಯಕ್ರಮವನ್ನು ಏರ್ಪಡಿಸಿತ್ತು.

ADVERTISEMENT

‘ಸರ್ಕಾರ ಆಯುರ್ವೇದ ವೈದ್ಯರ ನೇಮಕಕ್ಕೆ ಕ್ರಮವಹಿಸಿದೆ. ಕುಶಾಲನಗರ ಆಯುರ್ವೇದ ಆಸ್ಪತ್ರೆಗೆ ಇಬ್ಬರು ವೈದ್ಯರನ್ನು ನೇಮಿಸಲಾಗುವುದು. ಅಲ್ಲಿಯವರೆಗೂ ನಿಯೋಜನೆ ಮೇಲೆ ಕಳುಹಿಸಿ, ಚಿಕಿತ್ಸೆ ಒದಗಿಸಲಾಗುವುದು’ ಎಂದು ತಿಳಿಸಿದರು.

‘ಈಚಿನ ದಿನಗಳಲ್ಲಿ ಜನರು ಆಯುರ್ವೇದ ಹಾಗೂ ಹೋಮಿಯೋಪಥಿ ಚಿಕಿತ್ಸೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ನೂತನ ಆಸ್ಪತ್ರೆಯ ಸೇವೆಯನ್ನು ಆಸುಪಾಸಿನ ಪ್ರದೇಶಗಳ ಜನರೂ ಪಡೆಯಬೇಕು’ ಎಂದು ಆಶಿಸಿದರು.

‘ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಬಹುತೇಕ ಮುಗಿದಿದೆ. ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಜಾಗದ ಸಮಸ್ಯೆ ಇದ್ದು, ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಅವರು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ: ‘ಬೇಸಿಗೆ ಕಾಲದ ಆರಂಭದಲ್ಲಿಯೇ ಪಟ್ಟಣ ಹಾಗೂ ಸುತ್ತಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಪರಿಹಾರ ಕ್ರಮ ವಹಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಪಿ.ಚಂದ್ರಕಲಾ, ಪಿ.ಎಂ.ಲತೀಫ್, ಕೆ.ಆರ್.ಮಂಜುಳಾ, ಸುನೀತಾ ಮಂಜುನಾಥ್, ಕುಮುದಾ ಧರ್ಮಪ್ಪ, ‘ಕುಡಾ’ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರ್ಗೇಹಳ್ಳಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್.ರಾಮಚಂದ್ರ, ವೈದ್ಯಾಧಿಕಾರಿಗಳಾದ ಡಾ.ಆರ್.ಎಚ್.ಅಮೂಲ್ಯಾ, ಡಾ.ಶುಭಾ, ಡಾ.ಶ್ರೀನಿವಾಸ್ , ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಪಟ್ಟಣ ಪಂಚಾಯಿತಿ ಸದಸ್ಯ ಎಂ.ಎಚ್.ಫಜಲುಲ್ಲಾ, ಕಾಂಗ್ರೆಸ್ ಮುಖಂಡರಾದ ಮಿಟ್ಟುಚಂಗಪ್ಪ, ವಕೀಲ ಎಚ್.ಎಸ್.ಚಂದ್ರಮೌಳಿ, ಆರ್.ಕೆ.ನಾಗೇಂದ್ರಬಾಬು, ಮುಖಂಡರಾದ ಎಸ್.ಎನ್.ನರಸಿಂಹಮೂರ್ತಿ, ಕೆ.ಎಂ.ಲೋಕೇಶ್, ಜೋಸೆಫ್ ವಿಕ್ಟರ್ ಸೋನ್ಸ್, ಅಣ್ಣೀರ ಹರೀಶ್ ಮಾದಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.