ಮಡಿಕೇರಿ: ಯುವಜನರ ಉದ್ಯೋಗ ಬೇಡಿಕೆಗಳ ಪ್ರಣಾಳಿಕೆಯನ್ನು ಸ್ವೀಕರಿಸುವ ರಾಜಕೀಯ ಪಕ್ಷಕ್ಕೆ ಮಾತ್ರ ನಮ್ಮ ಮತವೆಂದು ‘ಉದ್ಯೋಗಕ್ಕಾಗಿ ಯುವಜನರು’ ಆಂದೋಲನದ ಪದಾಧಿಕಾರಿಗಳು ಎಚ್ಚರಿಸಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಂದೋಲನದ ಜಿಲ್ಲಾ ಸಂಚಾಲಕಿ ಪುಷ್ಪಲತಾ, ರಾಜ್ಯದಲ್ಲಿ ವಿವಿಧ ಪಕ್ಷಗಳು ಆರೋಪ– ಪ್ರತ್ಯಾರೋಪಗಳಲ್ಲಿ ಮುಳುಗಿವೆ. ನಿರುದ್ಯೋಗ ಪರಿಹಾರಕ್ಕಾಗಿ ರಾಜ್ಯದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಪ್ರತಿ ಜಿಲ್ಲೆಯಲ್ಲಿ ಯುವಕರನ್ನು ಆಂದೋಲನದ ಪದಾಧಿಕಾರಿಗಳನ್ನು ನೇಮಿಸಿ, ಉದ್ಯೋಗದ ಬೇಡಿಕೆಗಳನ್ನು ಪಕ್ಷಗಳ ಮುಂದಿಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದರು.
ಪ್ರಣಾಳಿಕೆಯಲ್ಲಿ ಇರುವಂತೆ ರಾಜ್ಯದಲ್ಲಿ 1 ಕೋಟಿ ಉದ್ಯೋಗ ಭದ್ರತೆಗೆ ಕ್ರಮ ಕೈಗೊಳ್ಳಬೇಕು. 50 ಲಕ್ಷದಷ್ಟು ಹೊಸ ಉದ್ಯೋಗ ಸೃಷ್ಟಿಸಬೇಕು. ಸಮಾನ ವೇತನ ಜಾರಿಯಾಗಬೇಕು. ‘ಉದ್ಯೋಗ ಆಯೋಗ’ ರಚಿಸಬೇಕು. ಗುತ್ತಿಗೆ ನೌಕರರಿಗೆ 60 ವರ್ಷಗಳ ಸೇವಾ ಭದ್ರತೆ ನೀಡಬೇಕು. ಗುತ್ತಿಗೆ ಹಾಗೂ ತಾತ್ಕಾಲಿಕ ನೌಕರರ ಕ್ಷೇಮಾಭಿವೃದ್ಧಿ ಸ್ಥಾಪನೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ರಜನಿಕಾಂತ್, ಪದಾಧಿಕಾರಿಗಳಾದ ಪವನ್ ಕುಮಾರ್, ಯಶೋದಾ, ಅನಿತಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.