ಮಡಿಕೇರಿ: ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಆ ಭಾಗದ ಶಾಸಕರ ನೇತೃತ್ವದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಒತ್ತುವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು. ಒತ್ತುವರಿ ಮಾಡಿರುವ ಕಂದಾಯ ಭೂಮಿಯನ್ನು ಕೇರಳ ರಾಜ್ಯ ಸರ್ಕಾರದ ಮಾದರಿಯಂತೆ 35 ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ರೈತರಿಗೆ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಕೋರಲಾಯಿತು.
ಸಹಕಾರಿ ಸಂಸ್ಥೆಯಲ್ಲಿ ರೈತರು ಪಡೆದಿರುವ ಸಾಲದ ಅಸಲನ್ನು ಪಾವತಿಸಿದರೆ, ಬಡ್ಡಿ ಮನ್ನಾ ಮಾಡುವ ಸೌಲಭ್ಯವನ್ನು 2018ರ ಜೂನ್ ಅಂತ್ಯದವರೆವಿಗೂ ವಿಸ್ತರಿಸುವಂತೆ ಮನವಿ ಮಾಡಲಾಯಿತು.
ಕರ್ನಾಟಕ ಎಪಿಎಂಸಿಗಳಲ್ಲಿ ಕಾಳುಮೆಣಸಿಗೆ ವಿಧಿಸುತ್ತಿರುವ ಸೇವಾ ಶುಲ್ಕ ರದ್ದುಗೊಸಬೇಕು. ಕಾಳುಮೆಣಸು ಬೆಳೆಗಾರರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆ ತಪ್ಪಿಸಬೇಕೆಂದು ಮನವಿ ಮಾಡಿದರು.
ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಗೂ ಹಾಸನ, ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಜೈರಾಂ, ಉಪಾಧ್ಯಕ್ಷ ನಂದಾ ಬೆಳ್ಳಿಯಪ್ಪ, ಸಂಘಟನಾ ಕಾರ್ಯದರ್ಶಿ ಎನ್.ಬಿ. ಉದಯ್ ಕುಮಾರ್, ಒಕ್ಕೂಟದ ವಕ್ತಾರ ಕೆ.ಕೆ. ವಿಶ್ವನಾಥ್, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಮಾಜಿ ಅಧ್ಯಕ್ಷ ಕೆ.ಬಿ. ಕೃಷ್ಣಪ್ಪ, ಗೌರವ ಕಾರ್ಯದರ್ಶಿ ಮುರಳೀದರ್ ಎಸ್. ಬಕ್ಕರವಳ್ಳಿ, ಉಪಾಧ್ಯಕ್ಷ ತೋ.ಚ. ಅನಂತ ಸುಬ್ಬರಾಯ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಎನ್. ಕೃಷ್ಣೇಗೌಡ, ಪ್ರಮುಖರಾದ ಬಿ.ಎಂ. ಪ್ರವೀಣ್, ಸುಂದ್ರೇಶ್, ಸತೀಶ್, ರಘು ನಿಯೋಗದಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.