ADVERTISEMENT

ಜನಸಂಖ್ಯೆ ಹೆಚ್ಚಳ ಅಭಿವೃದ್ಧಿಗೆ ಮಾರಕ

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 6:56 IST
Last Updated 12 ಜುಲೈ 2017, 6:56 IST

ಮಡಿಕೇರಿ: ‘ಜನಸಂಖ್ಯೆ ಹೆಚ್ಚಳದಿಂದ ಹಲವು ಸಮಸ್ಯೆಗಳು ಉಂಟಾಗಲಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು’ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರದ ವತಿಯಿಂದ ಮಂಗಳವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಕೊಡಗು ಜಿಲ್ಲೆಯಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿದೆ. ಇದೇ ಕಾರಣಕ್ಕೆ ಮೂರು ವಿಧಾನಸಭಾ ಕ್ಷೇತ್ರಗಳನ್ನು ಎರಡಕ್ಕೆ ಸೀಮಿತ ಮಾಡಲಾಗಿದೆ. ಜನಸಂಖ್ಯೆಗಿಂತ ಭೂವಿಸ್ತೀರ್ಣದ ಆಧಾರ ಮೇಲೆ ಕ್ಷೇತ್ರ ವಿಂಗಡಿಸಬೇಕು’ ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ‘ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣ ಮಾಡಿ ಸ್ವಸ್ಥ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಕರೆ ನೀಡಿದರು.

ADVERTISEMENT

ಪ್ರಾಧ್ಯಾಪಕ ಡಾ.ಕೆ.ಸಿ.ದಯಾನಂದ ಮಾತನಾಡಿ, ‘ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಎಲ್ಲರೂ ಶ್ರಮಿಸಬೇಕು. ದೇಶದಲ್ಲಿ ಪ್ರತೀ ವರ್ಷ ಒಂದು ಕೋಟಿಯಷ್ಟು ಜನಸಂಖ್ಯೆ ಹೆಚ್ಚಳವಾಗುತ್ತದೆ. ಇದರಿಂದ ಜೀವನ ಮಟ್ಟ ಕುಸಿಯುವ ಜತೆಗೆ ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಒ.ಆರ್. ಶ್ರೀರಂಗಪ್ಪ, ಕ್ಷಯರೋಗ ನಿಯಂತ್ರಣಾಧಿಕಾರಿ ಶಿವಕುಮಾರ್, ಉಪನ್ಯಾಸಕ ಸಿದ್ದರಾಜು ಬೆಳ್ಳಯ್ಯ, ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.