ಮಡಿಕೇರಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿ ಕೊಂಡಿದ್ದ ಯೋಗ ಜಾಗೃತಿ ಜಾಥಾಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಜಾಥಾಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್ ಹಾಗೂ ಡಿವೈಎಸ್ಪಿ ಸುಂದರರಾಜ್ ಅವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ– ಸಂಸ್ಥೆಗಳ ಆಶ್ರಯದಲ್ಲಿ ಈ ಯೋಗಥಾನ್ ಹಮ್ಮಿಕೊಳ್ಳಲಾಗಿತ್ತು.
ಸತೀಶ್ ಕುಮಾರ್ ಮಾತನಾಡಿ, ‘ಯೋಗವು ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರತಿನಿತ್ಯ ಯೋಗದಲ್ಲಿ ತೊಡಗಿಸಿಕೊಳ್ಳುವುದರಿಂದ ಹಲವು ಕಾಯಿಲೆಗಳಿಂದ ದೂರವಿರಲು ಸಾಧ್ಯವಾಗಲಿದೆ. ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಯೋಗ ಸಹಕಾರಿ. ಯೋಗದ ಮಹತ್ವ ಮತ್ತು ಪ್ರಯೋಜನದ ಬಗ್ಗೆ ಜಾಗೃತಿ ಮೂಡಿಸಲು ಯೋಗವಾಕ್ ಆಯೋಜಿಸಲಾಗಿದೆ’ ಎಂದು ಹೇಳಿದರು.
ಸುಂದರರಾಜ್ ಮಾತನಾಡಿ, ‘ಇಂದಿನ ವೇಗದ ಬದುಕಿನಲ್ಲಿ ಒತ್ತಡದಿಂದ ಪಾರಾಗಲು ಯೋಗ ಸಹಕಾರಿ’ ಎಂದು ಅಭಿಪ್ರಾಯಪಟ್ಟರು.
ಜಾಥಾ, ನಗರದ ಗಾಂಧಿ ಮೈದಾನದಿಂದ ಆರಂಭಗೊಂಡು ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಕಾಲೇಜು ರಸ್ತೆ, ಕೊಹಿನೂರು ರಸ್ತೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಜೂನಿಯರ್ ಕಾಲೇಜು ರಸ್ತೆ ಮೂಲಕ ಓಂಕಾರೇಶ್ವರ ದೇವಸ್ಥಾನದ ಬಳಿ ಲಕ್ಷ್ಮಿ ನರಸಿಂಹಕಲ್ಯಾಣ ಮಂಟಪದ ಬಳಿ ಕೊನೆಗೊಂಡಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್. ರಾಮಚಂದ್ರ, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಜಗದೀಶ್, ಯೋಗ ತರಬೇತುದಾರ ರಮೇಶ್ ಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.