ಮಡಿಕೇರಿ: ‘ದೇಸಿ ಸಂಸ್ಕೃತಿಯನ್ನು ಉಳಿಸಿ– ಬೆಳೆಸಲು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠವನ್ನು ಅಸ್ತಿತ್ವಕ್ಕೆ ತಂದಿದೆ’ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಮಂಗಳವಾರ ನಡೆದ ಪ್ರಕೋಷ್ಠದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಷ್ಟ್ರದಲ್ಲಿಯೇ ಪ್ರಥಮ ಬಾರಿಗೆ ಆಯಾ ಜಿಲ್ಲೆಯ ಕಲಾವಿದರನ್ನು ಗುರುತಿಸಿ, ಉತ್ತೇಜಿಸುವ ಕೆಲಸವನ್ನು ಪ್ರಕೋಷ್ಠ ಮೂಲಕ ಬಿಜೆಪಿ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕಲಾವಿದರಿಗೆ ವೇದಿಕೆ ಕಲ್ಪಿಸುವುದು, ಸಾಧನೆ ಮಾಡಿದ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವುದು, ಹಾಗೆಯೇ ಕಲಾವಿದರ ಸಮಸ್ಯೆಗಳಿಗೆ ಸ್ಪಂದಿಸಿ ಸಹಾಯ ಮಾಡವ ಕೆಲಸವನ್ನು ಪ್ರಕೋಷ್ಠದ ಮೂಲಕ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.‘ಪಕ್ಷದ ಕಾರ್ಯಕರ್ತರು ಜನಪರ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸುವ ಮೂಲಕ ಜನಸಾಮಾನ್ಯರ ನೋವಿಗೆ ಸ್ಪಂದಿಸಬೇಕು. ಜನಸೇವೆಗಾಗಿ ಹೆಚ್ಚು ಸಮಯವನ್ನೂ ಮೀಸಲಿಡಬೇಕು’ ಎಂದು ಸಲಹೆ ನೀಡಿದರು.
ಜಿಲ್ಲೆ ವಿವಿಧತೆಯಲ್ಲಿ ಏಕತೆ ಕಾಣುತ್ತಿದೆ; ಕೊಡಗಿನ ಪ್ರತಿಯೊಂದು ಪ್ರತಿ ಜನಾಂಗದಲ್ಲಿ ಕಲೆ, ಸಂಸ್ಕೃತಿ ಅಡಗಿದೆ. ಪ್ರಕೋಷ್ಠದಿಂದ ಎಲ್ಲರಿಗೆ ಪ್ರಯೋಜನಕಾರಿ ಎಂದು ವಿವರಿಸಿದರು.ಯುವ ಪ್ರತಿಭೆಗಳಿಗೆ ಉತ್ತೇಜನ ನೀಡಲು ಜಿಲ್ಲಾ ಸಂಚಾಲಕಿ ಭಾರತೀ ರಮೇಶ್ ನೇತೃತ್ವದಲ್ಲಿ ಪ್ರಕೋಷ್ಠ ಉತ್ತಮ ಕೆಲಸಗಳನ್ನು ನಿರ್ವಹಿಸಲಿ ಎಂದು ಹಾರೈಸಿದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಬಿ.ಬಿ.ಭಾರತೀಶ್, ಬಿಜೆಪಿ ಘಟಕದ ಪಕ್ಷದ ಪ್ರಧಾನ ಕಾರ್ಯದರ್ಶಿ ಕಾಂತಿ ಸತೀಶ್ ಮಾತನಾಡಿದರು.ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ಮೌನಾ, ಕಲಾವಿದರಾದ ರಾಣಿ ಮಾಚಯ್ಯ, ಕಿಗ್ಗಾಳು ಗಿರೀಶ್, ರಾಜು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪ್ರಕೋಷ್ಠದ ಜಿಲ್ಲಾ ಸಂಚಾಲಕಿ ಭಾರತೀ ರಮೇಶ್, ವಿದ್ವಾನ್ ಬಿ.ಸಿ. ಶಂಕರಯ್ಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕೆಡ ಶೋಭಾ ಮೋಹನ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಜೈನ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್, ನಗರಸಭೆ ಸದಸ್ಯೆ ಅನಿತಾ ಪೂವಯ್ಯ, ಸವಿತಾ ರಾಕೇಶ್, ಪ್ರಮುಖರಾದ ಸಹ ಸಂಚಾಲಕ ಮಿಟ್ಟು ಪೂಣಚ್ಚ, ರಾಜು, ಸಂತೋಷ್, ನಳಿನಿ ಗಣೇಶ್, ಕವಿತಾ ಬೆಳ್ಯಪ್ಪ ಹಾಜರಿದ್ದರು. ನಂತರ, ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.