ADVERTISEMENT

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಚಿಂತನೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 22 ಜೂನ್ 2017, 8:47 IST
Last Updated 22 ಜೂನ್ 2017, 8:47 IST

ಮಡಿಕೇರಿ: ನಗರದ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನಲ್ಲಿ ಮಂಗಳವಾರ ‘ತೆರೆದ ಮನೆ’ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲರಾದ ಪಾರ್ವತಿ ಅಪ್ಪಯ್ಯ ಮಾತನಾಡಿ, ‘ಕಾಲೇಜಿನ ಸ್ನಾತಕೋತ್ತರ ಕೋರ್ಸ್‌ಗಳು, ಮೂಲ ಸೌಕರ್ಯಗಳು, ಸಂಶೋಧನೆಗೆ ಇರುವ ಅವಕಾಶಗಳು, ಗ್ರಂಥಾಲಯ, ವಿದ್ಯಾರ್ಥಿನಿಲಯ, ಪ್ರಯೋಗಾಲಯ, ಶೈಕ್ಷಣಿಕ ಚಟುವಟಿಕೆ, ಉದ್ಯೋಗ ಅವಕಾಶಗಳು, ಶಿಷ್ಯವೇತನ, ಕೌಶಲ ಅಭಿವೃದ್ಧಿ ಬಗ್ಗೆ ಇರುವ ಅವಕಾಶಗಳ ಮಾಹಿತಿ ನೀಡುವುದೇ ‘ತೆರೆದ ಮನೆ’ ಕಾರ್ಯಕ್ರಮದ ಉದ್ದೇಶ’ ಎಂದು ಅವರು ತಿಳಿಸಿದರು.

‘ಸ್ನಾತಕೋತ್ತರ ಪದವಿಯಲ್ಲಿ ಯಾವ ವಿಷಯ ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಗೊಂದಲ ಇರುತ್ತದೆ. ಇದನ್ನು ನಿವಾರಿಸುವುದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಅವರು ಹೇಳಿದರು.

‘ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಆಸಕ್ತಿ ಇರುವ ಐಚ್ಛಿಕ ವಿಷಯವನ್ನೇ ಆಯ್ಕೆ ಮಾಡಿಕೊಂಡು ಒಳ್ಳೆಯ ಶಿಕ್ಷಣ ಹಾಗೂ ಉದ್ಯೋಗ ಪಡೆಯಬೇಕು’ ಎಂದು ಸಲಹೆ ಮಾಡಿದರು.

ADVERTISEMENT

ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ ಮಾತನಾಡಿ, ‘ಈಚಿನ ದಿನಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚಿನ ಆಯ್ಕೆಗಳು ಇವೆ. ಅಧ್ಯಯನ ಆಸಕ್ತಿ ಇರುವ ವಿಷಯವನ್ನೇ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬೇಕು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದೂ ಅಗತ್ಯ’ ಎಂದು ಅವರು ಹೇಳಿದರು.  

ಸರ್ಕಾರ ‘ಕೌಶಲ ಕರ್ನಾಟಕ’ ಹೆಸರಿನಲ್ಲಿ ಉದ್ಯೋಗ ಕಲ್ಪಿಸುತ್ತಿದ್ದು, ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಟಿ.ಡಿ.ತಿಮ್ಮಯ್ಯ ಮಾತನಾಡಿದರು. ಪ್ರಾಧ್ಯಾಪಕ ಕಶ್ಯಪ್, ಗಾಯತ್ರಿ, ಕಮಲಾ, ವಿಜಯಲತಾ, ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪೂಣಚ್ಚ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.