ADVERTISEMENT

ಶೇ 24 ಮೀಸಲಾತಿ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2017, 8:38 IST
Last Updated 13 ಸೆಪ್ಟೆಂಬರ್ 2017, 8:38 IST

ಕುಶಾಲನಗರ: ರಾಜ್ಯದಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡದ ಜನಸಂಖ್ಯೆ ಸಮೀಕ್ಷೆ ಪ್ರಕಾರ 1.15 ಕೋಟಿ ಇದ್ದು, ಜನಸಂಖ್ಯಾ ಆಧಾರ ಮೇಲೆ ಶೇ 24 ರಷ್ಟು ಮೀಸಲಾತಿಯನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇಲ್ಲಿನ ಸರ್ಕಾರಿ ಪಿಯು ಕಾಲೇಜು ಸಭಾಂಗಣದಲ್ಲಿ ಈಚೆಗೆ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಮನ್ವಯ ಸಮಿತಿ ರಚನಾ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷವಾದರೂ ದಲಿತರ ಮೇಲೆ ಶೋಷಣೆ ನಿಂತಿಲ್ಲ. ವಿವಿಧ ಇಲಾಖೆಗಳಲ್ಲಿರುವ ಡಿ ದರ್ಜೆ ನೌಕರರ ಮೇಲೆ ಮೇಲಧಿಕಾರಿಗಳು ನಿತ್ಯ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಈಗ ಸುಪ್ರೀಂ ಕೋರ್ಟ್ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶದಿಂದ ದಲಿತ ಸಮುದಾಯಕ್ಕೆ ಅನ್ಯಾಯವಾಗಲಿದೆ. ರಾಜ್ಯ ಸರ್ಕಾರ ದಲಿತರ ಹಿತ ಕಾಯಬೇಕು ಎಂದು ಆಗ್ರಹಿಸಿದರು.

ಬಡ್ತಿ ಮೀಸಲಾತಿಯನ್ನು ಕೈಬಿಟ್ಟಲ್ಲಿ ಸುಮಾರು 10 ಸಾವಿರ ನೌಕರರಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಎಲ್ಲ ಇಲಾಖೆಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರು ಸಂಘಟಿತರಾಗುವ ಮೂಲಕ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸಮಿತಿ ಉಪಾಧ್ಯಕ್ಷ ಮೋಹನ್ ಮಾತನಾಡಿ, ರಾಜ್ಯ ಸಮಿತಿ ಕಳೆದ 10 ವರ್ಷಗಳಿಂದ ಡಾ ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿ ಕೊಂಡು ಶೋಷಿತರ ಪರವಾಗಿ ಹೋರಾಟ ನಡೆಸುತ್ತ ಬಂದಿದೆ ಎಂದರು.

ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಮಹಾದೇವ, ಕ್ಷೀರ ಯೋಜನೆ ಅಧಿಕಾರಿ ಎಂ.ಕೃಷ್ಣ, ಪಶುಸಂಗೋಪಾನ ಇಲಾಖೆ ನಾಗರಾಜು, ತೋಟಗಾರಿಕೆ ಇಲಾಖೆ ಅಧಿಕಾರಿ ಗಣೇಶ್, ಕೂಡಿಗೆ ಪಿಯು ಕಾಲೇಜು ಪ್ರಾಂಶುಪಾಲ ಮಹಾಲಿಂಗಯ್ಯ ಮುಖಂಡರಾದ ದಸಂಸ ಜಿಲ್ಲಾ ಸಂಚಾಲಕ ಕೆ.ಬಿ.ರಾಜು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಎಸ್.ಮಹೇಂದ್ರ ಮುಖಂಡರಾದ ಇಂದಿರಾ, ನಾರಾಯಣ್,ಸುರೇಶ್, ಶ್ರೀನಿವಾಸ್. ಶಿವಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.