ADVERTISEMENT

ಸಂಪನ್ಮೂ ಲ ಹೆಚ್ಚಳಕ್ಕೆ ಶಿಕ್ಷಣ ಅಗತ್ಯ

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2016, 7:28 IST
Last Updated 12 ಫೆಬ್ರುವರಿ 2016, 7:28 IST

ನಾಪೋಕ್ಲು: ಸಮಾಜದಲ್ಲಿ ಮಕ್ಕಳು ಹಾಗೂ ಮಹಿಳೆಯರು ಶೋಷಣೆಗೆ ಒಳಗಾಗುತ್ತಿದ್ದು, ಸಮಾಜದಲ್ಲಿ ಅವರು ಉತ್ತಮ ಸಾಮರ್ಥ್ಯ ಗಳಿಸಿ ಅಭಿವೃದ್ಧಿ ಸಾಧಿಸಲು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ದಮಯಂತಿ ಹೇಳಿದರು.

ಸಮೀಪದ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಹೋಬಳಿಮಟ್ಟದ ಪರೀಕ್ಷಾ ಸಿದ್ಧತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಮಟ್ಟದಲ್ಲಿ ಮನುಷ್ಯನ ಸರಾಸರಿ ಜೀವಿತಾವಧಿ ಹೆಚ್ಚು ಇರುವ ದೇಶ ಅಭಿವೃದ್ಧಿಯಾಗಿದೆ ಎಂದು ಪರಿಗಣಿಸಲಾಗುತ್ತಿದೆ. ಮನುಷ್ಯ ಹೆಚ್ಚು ಕಾಲ ಬದುಕಬೇಕಾದರೆ ಬದುಕಿನ ವ್ಯವಸ್ಥೆ ಅದಕ್ಕೆ ಪೂರಕವಾಗಿರಬೇಕು. ಮಕ್ಕಳ ಹಾಗೂ ಮಹಿಳೆಯರ ಸಂಪನ್ಮೂಲವನ್ನು ಹೆಚ್ಚಿಸಲು ಉತ್ತಮ ಶಿಕ್ಷಣದ ಅಗತ್ಯವಿದೆ. ಮಕ್ಕಳ ಸಮಗ್ರ ಬೆಳವಣಿಗೆ ಆಗಬೇಕಾದರೆ ಆಟ.

ಆಹಾರ ಹಾಗೂ ಶಿಕ್ಷಣದ ಅಗತ್ಯವಿದೆ. ಯಾವುದೇ ಒಂದು ಅಂಶದ ಕೊರತೆಯಾದಲ್ಲೂ ಸಂಪೂರ್ಣ ಅಭಿವೃದ್ಧಿ ಸಾಧ್ಯವಿಲ್ಲ. ವಿದ್ಯಾರ್ಥಿಗಳು ಶಿಕ್ಷಣದ ಪರೀಕ್ಷೆಯನ್ನು ಹಾಗೂ ಜೀವನದ ಪರೀಕ್ಷೆಯನ್ನು ಆತಂಕ ಇಲ್ಲದೆ ಎದುರಿಸುವಂತಾಗಲು ಸೂಕ್ತ ತಯಾರಿ ಮಾಡಿಕೊಳ್ಳಬೇಕಾದುದು ಅತ್ಯವಶ್ಯಕ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಹಾಜಿ ಮಾತನಾಡಿ, ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಸವಿತಾ, ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕ ಪಿ.ಆರ್. ಅಯ್ಯಪ್ಪ ಉಪಸ್ಥಿತರಿದ್ದರು. ಸಹಶಿಕ್ಷಕ ಮಾರುತಿ ಅರೇರಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸುಜಾತ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.