ADVERTISEMENT

ಸುಧಾರಣಾ ಕ್ರಮದಿಂದ ಆರ್ಥಿಕ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 24 ಮೇ 2017, 7:02 IST
Last Updated 24 ಮೇ 2017, 7:02 IST

ಮಡಿಕೇರಿ:‘ರಾಜೀವ್ ಗಾಂಧಿ ಅವರು ಜಾರಿಗೆ ತಂದಿದ್ದ ಸುಧಾರಣಾ ಕ್ರಮಗಳಿಂದ ಭಾರತ ಆರ್ಥಿಕ, ಶೈಕ್ಷಣಿಕ ಹಾಗೂ ವೈಜ್ಞಾನಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸುತ್ತಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು.

ವಿರಾಜಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಆಶ್ರಯದಲ್ಲಿ ಈಚೆಗೆ ನಡೆದ ರಾಜೀವ್ ಗಾಂಧಿ ಅವರ 26ನೇ ಸ್ಮರಣೆ ಮತ್ತು ಗ್ರಾಮ ಸಂವಾದದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್, ತನ್ನದೇ ಆದ ಸಂವಿಧಾನವನ್ನು ಹೊಂದಿರುವಂತಹ ಏಕೈಕ ರಾಜಕೀಯ ಪಕ್ಷ; ಬಡವರ, ದೀನ ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿರುವ ಪಕ್ಷದ ಸದಸ್ಯನಾಗುವುದು ಹೆಮ್ಮೆಯ ವಿಚಾರ ಎಂದು ಬಣ್ಣಿಸಿದರು.

ADVERTISEMENT

ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರ ಮೈನಾ ಮಾತನಾಡಿ, ಸಂವಿಧಾನದ 73ನೇ ತಿದ್ದುಪಡಿಯಂತೆ ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆತಂದು ಹಳ್ಳಿಗಳಲ್ಲಿ ಸ್ಥಳೀಯ ಸರ್ಕಾರದ ರಚನೆಗೆ ಕಾರಣರಾದವರು ರಾಜೀವ್‌ ಗಾಂಧಿ ಎಂದು ವಿವರಿಸಿದರು.

ಡಿಸಿಸಿ ಬ್ಯಾಂಕ್‌ ಸದಸ್ಯ ಹಕೀಂ, ‘ತಳಮಟ್ಟದಿಂದ ಪಕ್ಷದ ಸಂಘಟನೆಗೆ ಎಲ್ಲರೂ ಕೈಜೋಡಿಸಿ ಶ್ರಮಿಸಬೇಕು. ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಪರಿಚಯಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಸದಸ್ಯರು ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಐಎನ್‌ಯುಟಿಸಿ ಜಿಲ್ಲಾಧ್ಯಕ್ಷ ಕೂಡಿಗೆ ಹಮೀದ್, ಯುವ ಕಾಂಗ್ರೆಸ್ ಕಾರ್ಯದರ್ಶಿ ರೆಜಿತ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.