ಶನಿವಾರಸಂತೆ: ‘ಗ್ರಾಮ ಮಟ್ಟದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಬೀಟ್ ಪೊಲೀಸರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅಭಿಪ್ರಾಯಪಟ್ಟರು.
ಸಮೀಪದ ಗುಡುಗಳಲೆಯ ಆರ್.ವಿ.ಕಲ್ಯಾಣ ಮಂಟಪದಲ್ಲಿ ಶನಿವಾರಸಂತೆ ಪೊಲೀಸ್ ಠಾಣೆಯಿಂದ ಸೋಮವಾರ ಆಯೋಜಿಸಿದ್ದ ಸುಧಾರಿತ ಗಸ್ತು ವ್ಯವಸ್ಥೆಯ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಗ್ರಾಮಕ್ಕೆ ನೇಮಕವಾಗುವ ಹೆಡ್ ಕಾನ್ಸ್ಟೆಬಲ್, ಕಾನ್ಸ್ಟೆಬಲ್ ಅವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಪೂರ್ಣ ಹೊಣೆಗಾರಿಕೆ ಇರುತ್ತದೆ. ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆವ ಸಭೆಯಲ್ಲಿ ಅಪರಾಧ ತಡೆಯಲು. ಸಂಚಾರ ವ್ಯವಸ್ಥೆ ಸುಧಾರಿಸಲು, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಗ್ರಾಮಸ್ಥರು ಪೊಲೀಸರ ಜತೆ ಸಹಕರಿಸಬೇಕು. ಆಗ ಮಾತ್ರ ಸಮಾಜದ ಸುಧಾರಣೆ ಸಾಧ್ಯ ಎಂದು ಅವರು ತಿಳಿಸಿದರು.
ನಿಲುವಾಗಿಲು ಗ್ರಾಮದ ಕೃಷಿಕ ಸೋಮಪ್ಪ ಮಾತನಾಡಿ, ಕೊಡ್ಲಿಪೇಟೆ ಕೊಡಗು ಜಿಲ್ಲೆಯ ಗಡಿ ಭಾಗವಾಗಿದ್ದು ನೆರೆ ಜಿಲ್ಲೆಗಳಿಂದ ಜನ, ವಾಹನ ಸಂಚಾರ ಅಧಿಕವಾಗಿರುತ್ತದೆ. ಪೊಲೀಸ್ ಸಿಬ್ಬಂದಿ ಕೊರತೆ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕಷ್ಟವಾಗಿರುತ್ತದೆ. ಆದ್ದರಿಂದ ಕೊಡ್ಲಿಪೇಟೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.
ಕೊಡ್ಲಿಪೇಟೆಯ ಕೆಂಚೇಶ್ವರ ಮಾತನಾಡಿ, ಬಡವರು ಮನೆ ಕಟ್ಟಲು ಮರಳಿನ ಸಮಸ್ಯೆ ಇದೆ. ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರೆ, ಕಲ್ಲಳ್ಳಿಯ ಧರ್ಮ, ಕೊಡ್ಲಿಪೇಟೆಯಲ್ಲಿ ಪೊಲೀಸ್ ವಸತಿಗೃಹ ನಿರ್ಮಾಣದ ಸಮಸ್ಯೆ ಪರಿಹಾರವಾಗಬೇಕು ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಕುಶಾಲಪ್ಪ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಪ್ರಮುಖರಾದ ಎಸ್.ಸಿ.ಶರತ್ ಶೇಖರ್, ರಾಜಮ್ಮರುದ್ರಯ್ಯ, ಎಚ್.ಬಿ.ಜಯಮ್ಮ, ಹನೀಫ್, ಬ್ಯಾಡಗೊಟ್ಟದ ಅಬ್ಬಾಸ್, ಶಿಕ್ಷಕ ಜಯಕುಮಾರ್, ದೊಡ್ಡಳ್ಳಿ ಗ್ರಾಮದ ಡಿ.ಜೆ.ಈರಪ್ಪ, ಆಟೊ ಚಾಲಕರ ಸಂಘದ ಅಧ್ಯಕ್ಷ ದಿನೇಶ್, ರಂಗಸ್ವಾಮಿ, ಮಹಮ್ಮದ್ ಪಾಶ, ಜಗನ್ ಪಾಲ್ ಮತ್ತಿತರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಸಿ.ಸಂಪತ್ ಕುಮಾರ್, ಸಿಪಿಐ ಪರಶಿವಮೂರ್ತಿ, ಮಹೇಶ್, ಪಿಎಸ್ಐ ಎಚ್.ಎಂ.ಮರಿಸ್ವಾಮಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.