ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಎದರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಪಿಎಂ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಕಾರ್ಯಕ್ರಮ ಬಡವರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ನಗದು ಕೈಗೆ ಬರದ ಕಾರಣ ಕೃಷಿ ಮತ್ತಿತರ ಕೆಲಸಗಳು ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ. ಹಾಗಾಗಿ ಬಡ ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಆಪಾದಿಸಿದರು.
ನ್ಯಾಯಬೆಲೆ ಅಂಗಡಿಗಳ ಮೂಲಕ ಬಡವರಿಗೆ ಆಹಾರ ಧಾನ್ಯ ವಿತರಿಸುತ್ತಿದ್ದ ಸರ್ಕಾರ, ಆಹಾರ ಧಾನ್ಯದ ಬದಲಿಗೆ ಹಣ ನೀಡುವ ಚಿಂತನೆ ನಡೆಸಿರುವುದು ದುರದೃಷ್ಟಕರ. ಕ್ಷಣ ಕ್ಷಣಕ್ಕೂ ಬೆಲೆ ಏರಿಕೆ ಉಂಟಾಗುತ್ತಿರುವ ಈ ಸಂದರ್ಭದಲ್ಲಿ ಹಣ ನೀಡುವುದರಿಂದ ಪ್ರಯೋಜ ನವಿಲ್ಲ. ಈ ಬಗ್ಗೆ ಸರ್ಕಾರ ಆಲೋಚಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರರಿಗೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ, ಮುಖಂಡರಾದ ಎನ್.ವೀರಪ್ಪರೆಡ್ಡಿ, ಜಿ. ಈಶ್ವರಮ್ಮ, ನಾರಾಯಣಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.