ಶ್ರೀನಿವಾಸಪುರ: ಕೋಲಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಕೋಲಾರದಲ್ಲಿ ಮೂರು ಅಂತಸ್ತಿನ ಕಟ್ಟಡ ಬಿದ್ದ ಘಟನೆ ವರದಿ ಮಾಡಲು ಹೋಗಿದ್ದ ಪತ್ರಕರ್ತರೊಬ್ಬರ ಮೇಲೆ ಟೌನ್ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಹೊನ್ನೇಗೌಡ ಹಾಗೂ ಅವರ ಸಿಬ್ಬಂದಿ ವಿನಾಕಾರಣ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸರ್ಕಾರ ಕೂಡಲೇ ಅವರನ್ನು ಅಮಾನತುಗೊಳಿಸಬೇಕು ಎಂದು ಮನವಿ ಪತ್ರದಲ್ಲಿ
ಆಗ್ರಹಿಸಿದ್ದಾರೆ.
ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದ್ದು, ಕಾರ್ಯನಿರತ ಪತ್ರಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದ ಹಾಗೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ನಾರಾಯಣಸ್ವಾಮಿ, ಕಾರ್ಯದರ್ಶಿ ಕೆ.ಎಂ.ಚೌಡಪ್ಪ, ಸದಸ್ಯರಾದ ಎನ್.ಮುನಿವೆಂಕಟೇಗೌಡ, ಶ್ರೀನಿವಾಸಮೂರ್ತಿ, ಜಿ.ಎಸ್.ಚಂದ್ರಶೇಖರ್, ಷಬ್ಬೀರ್ ಅಹ್ಮದ್, ಎಸ್.ಲಕ್ಷ್ಮಣಬಾಬು, ಲಿಂಗಶೆಟ್ಟಿ, ವೇಣುಗೋಪಾಲ್, ನಾರಾಯಣ ಮೂರ್ತಿ, ಎನ್.ಎಸ್.ಮೂರ್ತಿ, ರಮೇಶ್, ಸೋಮಶೇಖರ್, ಯಮನೂರು ನಾಗರಾಜ್, ಬಾಬು, ಕೆ.ವಿ.ನಾಗರಾಜ್, ವೆಂಕಟೇಶ್, ಸೂರ್ಯನಾರಾಯಣ, ಮುರಳಿ, ಕಿಶೋರ್ ಕುಮಾರ್, ಉಪೇಂದ್ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.