ಕೆಜಿಎಫ್: ಮಕ್ಕಳ ಅಪಹರಣ ಬಗ್ಗೆ ವದಂತಿ ಹಬ್ಬಿದ್ದು, ಕೂಡಲೇ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಮಾಜ ಸೇನೆಯ ಅಧ್ಯಕ್ಷ ಸೂಲಿಕುಂಟೆ ಆನಂದ್ ಒತ್ತಾಯಿಸಿದರು.
ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಈ ಸಂಬಂಧ ಮನವಿ ಸಲ್ಲಿಸಿದರು. ಮಕ್ಕಳ ಅಪಹರಣ, ಅವರ ಅಂಗಾಂಗ ಮಾರಾಟ ವಿಷಯಗಳ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ನಿರಂತರವಾಗಿ ಸುದ್ದಿ ಬರುತ್ತಿದೆ. ಅದು ಸತ್ಯವೋ, ಅಸತ್ಯವೋ ತಿಳಿಯುತ್ತಿಲ್ಲ. ಇಂತಹ ಸುದ್ದಿಗಳಿಗೆ ಕಡಿವಾಣ ಹಾಕಿ ಸುಳ್ಳು ಹರಡುವ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕರಲ್ಲಿ, ಅದರಲ್ಲೂ ಮಹಿಳೆಯರಲ್ಲಿ ಭೀತಿಯನ್ನು ಹೋಗಲಾಡಿಸಲು ಪೊಲೀಸ್ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆಕ್ರೋಶಕ್ಕೆ ಬಲಿಯಾಗುತ್ತಿರುವ ಅಮಾಯಕರನ್ನು ರಕ್ಷಿಸಬೇಕು ಎಂದು ಕೋರಿದರು.
ಸಂಘಟನೆಯ ರಮೇಶ್, ಸುಭಾಷ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.