ಕೋಲಾರ: ‘ಮಹದಾಯಿ ಜಲ ವಿವಾದದ ವಿಚಾರದಲ್ಲಿ ಬಿಜೆಪಿ ಮುಖಂಡರು ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.
ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಹೋರಾಟದಲ್ಲಿ ರೈತರು ಜೈಲಿಗೆ ಹೋಗಿ ಬಂದಿದ್ದಾರೆ. ಇದನ್ನೆಲ್ಲಾ ಕೇಂದ್ರ ಸರ್ಕಾರ ನೋಡಿದೆ. ಆಗ ಕೇಂದ್ರವು ಮಧ್ಯ ಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ ಎಂದು ದೂರಿದರು.
ಕೇಂದ್ರಕ್ಕೆ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ ಈ ಹಿಂದೆಯೇ ವಿವಾದ ಇತ್ಯರ್ಥಪಡಿಸಬೇಕಿತ್ತು. ಈಗಲೂ ಬಗೆಹರಿಸಲಿ, ಬೇಡ ಎನ್ನುವುದಿಲ್ಲ. ರೈತರಿಗೆ ಅನುಕೂಲ ಮಾಡುವುದಕ್ಕೆ ಯಾರೂ ಅಡ್ಡಿಪಡಿಸುವುದಿಲ್ಲ. ಹಿಂದೆಯೇ ಈ ಕಾಳಜಿ ತೋರಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನಿಸಿದರು.
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರವಾಗಿದೆ. ಈ ಹಿಂದೆಯೂ ಹಲವು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೇವೆ. ಬಿಜೆಪಿ ನಾಯಕರೆಲ್ಲಾ ಸೇರಿ ಆಂತರಿಕವಾಗಿ ಅಮಿತ್ ಷಾ ನೇತೃತ್ವದಲ್ಲಿ ಚರ್ಚೆ ನಡೆಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಅಥವಾ ನೀರಾವರಿ ಸಚಿವರನ್ನು ಕರೆದಿಲ್ಲ. ಆ ಮೂಲಕ ವಿವಾದವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.