ಕೋಲಾರ: ‘ಬಯಲು ಸೀಮೆ ಜಿಲ್ಲೆಗಳಿಗೆ ನೀರು ಹರಿಸಲು ಜಾರಿಗೊಳಿಸಿರುವ ಯೋಜನೆಗಳು ರಾಜಕಾರಣಿ, ಗುತ್ತಿಗೆ ದಾರ ಹಾಗೂ ಎಂಜಿನಿಯರ್ಗಳನ್ನು ಉದ್ಧಾರ ಮಾಡಲು ಅನುಷ್ಠಾನ ಗೊಳಿಸಲಾಗಿದೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಆರೋಪಿಸಿದರು.
ತಾಲ್ಲೂಕಿನ ಹುತ್ತೂರು ಗ್ರಾಮದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತ ನಾಡಿದ ಅವರು, ‘ಸರ್ಕಾರ ಪ್ರಸ್ತುತ ಕೈಗೊಂಡಿರುವ ಯೋಜನೆಗಳಿಂದ ಅವಿಭಜಿತ ಕೋಲಾರ ಜಿಲ್ಲೆಗೆ ಹನಿ ನೀರು ಲಭ್ಯವಾಗುವುದಿಲ್ಲ’ ಎಂದು ಅವರು ತಿಳಿಸಿದರು.
‘ರೈತರ ಸಮಸ್ಯೆಗಳನ್ನು ಬಗೆಹರಿಸು ವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಮುಂದಿನ ವಿಧಾನಸಭಾ ಚುನಾವಣೆ ಕಾರಣ ಕಾಂಗ್ರೆಸ್ ನಾಯಕರು ಜನರನ್ನು ನೀರಿನ ಹೆಸರಿನಲ್ಲಿ ವಂಚಿಸುತ್ತಿದ್ದಾರೆ. ಜನ ಅವರ ಮಾತಿಗೆ ಮರುಳಾಗ ಬಾರದು’ ಎಂದು ಹೇಳಿದರು.
‘ಎತ್ತಿನಯೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ತರುವುದಾಗಿ ರಾಜ್ಯ ಸರ್ಕಾರ ಬೊಗಳೆ ಬಿಡುತ್ತಿದೆ. ಆದರೆ ಎತ್ತಿನಹೊಳೆ ಹರಿಯುವ ಪ್ರದೇಶದಲ್ಲಿ ಮಳೆಯ ಕೊರತೆ ಕಾಡುತ್ತಿದೆ. ಅಲ್ಲಿಯೇ ನೀರಿಲ್ಲದೆ ಮೇಲೆ ಇಲ್ಲಿಗೆ ಹೇಗೆ ನೀರು ತರಿಸುತ್ತಾರೆ’ ಎಂದು ಪ್ರಶ್ನಿಸಿದರು.
‘ಕೆಸಿ ವ್ಯಾಲಿ ಯೋಜನೆ ಮೂಲಕ ಬೆಂಗಳೂರಿನ ಕೊಳಚೆ ನೀರನ್ನು ಕೋಲಾರಕ್ಕೆ ತರಲು ಸರ್ಕಾರ ಮುಂದಾಗಿದೆ. ಈ ನೀರಿನಿಂದ ಇಡೀ ಜಿಲ್ಲೆ ವಾತಾವರಣವೇ ಕೆಡುತ್ತದೆ. ಜನ ಮತ್ತು ಜಾನುವಾರುಗಳು ರೋಗಗಳಿಂದ ನರಳ ಬೇಕಾಗುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ವೀಕ್ಷಕ ಆರ್.ವಿ.ಹರೀಶ್, ‘ಕೇವಲ 20 ತಿಂಗಳು ಆಡಳಿತ ನಡೆಸಿದ ಕುಮಾರಸ್ವಾಮಿ ರಾಜ್ಯದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಮನೆ ಮಾತಾಗಿದ್ದಾರೆ. ಅವರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಿದಾಗ ಪಕ್ಷಕ್ಕೆ ಬಹುಮತ ದೊರೆಯುತ್ತದೆ’ ಎಂದು ಹೇಳಿದರು.
ವೀಕ್ಷಕ ಬೆಳ್ಳಿ ಲೋಕೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ವಿ.ಶಂಕರಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಾಗರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಇ.ಗೋಪಾಲ್, ಜಿಲ್ಲಾ ಕಾರ್ಯಾಧ್ಯಕ್ಷ ನಟರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ, ಎಪಿಎಂಸಿ ಮಾಜಿ ನಿರ್ದೇಶಕ ರಾಮು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.