ಶ್ರೀನಿವಾಸಪುರ: ‘ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು. ಶೌಚಾಲಯ ಬಳಸುವುದರ ಜತೆಗೆ ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದು ರಾಮನಾಥ್ ಫೌಡೇಶನ್ ಅಧ್ಯಕ್ಷ ಎನ್.ಜಯರಾಮ್ ಹೇಳಿದರು.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಹೆಣ್ಣು ಮಕ್ಕಳ ಶೌಚಾಲಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ’ಮನೆಯಲ್ಲಿ ಶೌಚಾಲಯ ಹೊಂದಿರುವುದು ನಾಗರೀಕತೆಯ ಸಂಕೇತ. ಗ್ರಾಮೀಣ ಲಪ್ರದೇಶದ ವಿದ್ಯಾರ್ಥಿನಿಯರು ತಮ್ಮ ಮನೆಗಳಲ್ಲಿ ಶೌಚಾಲಯ ಇಲ್ಲದಿದ್ದಲ್ಲಿ, ನಿರ್ಮಿಸುವಂತೆ ಪೋಷಕರಲ್ಲಿ ಮನವಿ ಮಾಡಬೇಕು’ ಎಂದು ಹೇಳಿದರು.
ಕಾಲೇಜಿನ ಉಪ ಪ್ರಾಂಶುಪಾಲ ಜಿ.ಮಂಜುನಾಥ್ ಮಾತನಾಡಿ, ‘ರಾಮನಾಥ್ ಫೌಡೇಶನ್ ಹಾಗೂ ಕಾಲೇಜಿನ ವತಿಯಿಂದ ₹ 6 ಲಕ್ಷ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗಾಗಿ ಶೌಚಾಲಯ ನಿರ್ಮಿಸಲಾಗಿದೆ. ಈ ಕಾರ್ಯಕ್ಕೆ ಸಹಾಯ ಹಸ್ತ ನೀಡಿದ ಫೌಂಡೇಶನ್ ಅಧ್ಯಕ್ಷ ಎನ್.ಜಯರಾಮ್ ಅಭಿನಂದನಾರ್ಹರು’ ಎಂದು ಹೇಳಿದರು.
‘ಶೌಚಾಲಯ ನಿರ್ಮಾಣದಲ್ಲಿ ಕೋಲಾರ ಜಿಲ್ಲೆ ದೇಸದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಅವರ ಸತತ ಪ್ರಯತ್ನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಜಿಲ್ಲೆಯ ಹೆಣ್ಣು ಮಕ್ಕಳು ಅವರನ್ನು ಅಭಿನಂದಿಸಬೇಕು. ಅವರ ಮಾದರಿ ಬೇರೆಯವರಿಗೆ ಸ್ಫೂರ್ತಿಯಾಗಿದೆ’ ಎಂದರು.
‘ಶೌಚಾಲಯ ನಿರ್ಮಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕುಟುಂಗಳಿಗೆ ತಲಾ ₹ 15 ಸಾವಿರ, ಇತರರಿಗೆ ₹ 12 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು. ವಿದ್ಯಾರ್ಥಿನಿಯರು ಶೌಚಾಲಯದ ಮಹತ್ವ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.