ಕೋಲಾರ: ‘ಬೆಮಲ್ ಉಳಿಸಲು ಮೇ 30ರಂದು ಕೋಲಾರ ಜಿಲ್ಲಾ ಬಂದ್ಗೆ ಕರೆ ನೀಡಿದ್ದು, ಇದರ ಅಂಗವಾಗಿ ಮೇ 26ರಂದು ನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಬೆಮಲ್ ಕಾರ್ಖಾನೆಯ ನೌಕರರ ಸಂಘದ ಅಧ್ಯಕ್ಷ ಆಂಜನೇಯರೆಡ್ಡಿ ತಿಳಿಸಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಸಂಜೆ ನಡೆದ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕ ಉದ್ಯಮ ಕ್ಷೇತ್ರಕ್ಕೆ ಒಳಪಟ್ಟಿರುವ ಬೆಮೆಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದನ್ನು ತಡೆಯಲು ಪ್ರತಿಯೊಬ್ಬರ ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.
‘ಬೆಮಲ್ ಖಾಸಗಿಯವರ ಪಾಲಾದರೆ ಹೊಸ ಉದ್ಯೋಗ ಸೃಷ್ಟಿಗೆ ಕಡಿವಾಣ ಬೀಳುತ್ತದೆ. ಖಾಸಗಿಯವರ ನಿಯಂತ್ರಣದಲ್ಲಿ ವ್ಯವಹಾರ ನಡೆಯುವುದರಿಂದ ಸರ್ಕಾರಕ್ಕೆ ಹಾಗೂ ದುಡಿಯುವ ವರ್ಗಕ್ಕೆ ನಷ್ಟ ಉಂಟಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಕೇಂದ್ರ ಸರ್ಕಾರದ ರಕ್ಷಣಾ ಸಚಿವರನ್ನು ಈ ಹಿಂದೆ ಭೇಟಿಯಾಗಿ ಬೆಮಲ್ ಖಾಸಗೀಕರಣಗೊಳಿಸದಂತೆ ಮನವಿ ಮಾಡಿಡಲಾಗಿತ್ತು, ಸಾರ್ವಜನಿಕ ಉದ್ಯಮವನ್ನು ಖಾಸಗೀಕರಣಗೊಳಿಸುವುದಿಲ್ಲ ಸಚಿವರು ಆಶ್ವಾಸನೆ ನೀಡಿದ್ದರು, ಆದರೆ ಈಗ ಯಾವುದೇ ಕ್ರಮಕೈಗೊಳ್ಳದೆ ವಚನ ಭ್ರಷ್ಟರಾಗಿದ್ದಾರೆ’ ಎಂದು ಆರೋಪಿಸಿದರು.
‘ಬೆಮಲ್ ಉಳಿಸಲು ಮೇ 30ರಂದು ಕೋಲಾರ ಜಿಲ್ಲಾ ಬಂದ್ಗೆ ಕರೆ ನೀಡಲಾಗಿದೆ. ಇದಕ್ಕೆ ಬೆಂಬಲ ಪಡೆಯಲು ಮೇ 26ರಂದು ಕೋಲಾರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ಸಮಾವೇಶ ಹಮ್ಮಿಕೊಳ್ಳಲಿದ್ದು, ಎಲ್ಲ ಕಾರ್ಮಿಕ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಬೇಕು’ ಎಂದು ಕೋರಿದರು.
ಬೆಮಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಜಯಸೆಲ್ವಂ, ನಗರ ಸಭಾ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ, ಕೆಪಿಆರ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್, ಭೀಮಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮುನಿವೆಂಕಟಪ್ಪ, ಬಿಎಸ್ಎನ್ಎಲ್ ನೌಕರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ, ಕೆಎಸ್ಆರ್ಟಿಸಿ ನೌಕರರ ಸಂಘದ ಸದಸ್ಯ ಬಾಲಕೃಷ್ಣ ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.