ADVERTISEMENT

ಸರ್ಕಾರಿ ಸೌಲಭ್ಯ ಫಲಾನುಭವಿಗಳಿಗೆ ತಲುಪಿಸಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2018, 6:56 IST
Last Updated 2 ಜನವರಿ 2018, 6:56 IST

ಮುಳಬಾಗಿಲು: ‘ಸರ್ಕಾರಿ ಸೌಲಭ್ಯಗಳು ನೇರವಾಗಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲು ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.

ನಗರದ ಅಮರಜ್ಯೋತಿ ಶಾಲಾ ಆವರಣದಲ್ಲಿ ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಸೋಮವಾರ ಹಮ್ಮಿಕೊಂಡಿದ್ದ ಕೊಳವಿ ಬಾವಿ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತಾಡಿದರು.

ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ 35 ಮಂದಿ ಫಲಾನುಭವಿಗಳಿಗೆ ಕೊಳವೆ ಬಾವಿ ಸಲಕರಣೆ ವಿತರಿಸಲಾಗಿದ್ದು, ಎಲ್ಲ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಇಂತಹ ಅನುದಾನಗಳನ್ನು ದುರುಪಯೋಗ ಮಾಡಿಕೊಳ್ಳಲು ಯಾರೊಬ್ಬರೂ ಅವಕಾಶ ನೀಡಬಾರದು ಎಂದು ತಿಳಿಸಿದರು.

ADVERTISEMENT

‘ರೈತರು ಲಾಭದಾಯಕ ಕೃಷಿ ಚಟುವಟಿಕೆಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಲು ಮುಂದಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ ಸಲಹೆ ನೀಡಿದರು.

ಗ್ರಾಮೀಣ ಭಾಗದಲ್ಲಿ ರೈತರು ಹಳೆಯ ಕಾಲದ ಕೃಷಿ ಪರಿಕರಗಳನ್ನು ಬಳಸಿಕೊಂಡು ವ್ಯವಸಾಯ ಕ್ಷೇತ್ರದಲ್ಲಿ ಮತ್ತಷ್ಟು ಹಿಂದುಳಿಯುತ್ತಿದ್ದಾರೆ. ರೈತರ ಕೃಷಿ ಹಾಗೂ ವ್ಯವಸಾಯ ಅಭಿವೃದ್ಧಿಗೊಳಿಸುವಲ್ಲಿ ಇವತ್ತಿನ ಸರ್ಕಾರ ರೈತಪರ ಯೋಜನೆ ಜಾರಿಗೊಳಿಸಿದೆ. ಆದ್ದರಿಂದ ರೈತರು ಎಲ್ಲ ಯೋಜನೆಗಳನ್ನು ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಮನವಿ ಮಾಡಿದರು.

ದೇವರಾಜು ಅರಸು ಅಭಿವೃದ್ಧಿ ನಿಗಮ ಇಲಾಖೆ ಅಧಿಕಾರಿ ಗಣೇಶ್, ಕೋಚಿಮುಲ್ ನಿರ್ದೇಶಕ ಆರ್.ಆರ್.ರಾಜೇಂದ್ರಗೌಡ, ಎಪಿಎಂಸಿ ಅಧ್ಯಕ್ಷ ರಘುಪತಿ, ನಗರಸಭೆ ಸದಸ್ಯ ಜಗನ್‍ ಮೋಹನ್‍ರೆಡ್ಡಿ, ಅಂಬ್ಲಿಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.