ADVERTISEMENT

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:34 IST
Last Updated 8 ಫೆಬ್ರುವರಿ 2018, 9:34 IST
ಮಾಸ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಮೃತಪಟ್ಟಿದ್ದಾರೆ  ಎಂದು ಆರೋಪಿಸಿ ಗ್ರಾಮಸ್ಥರು ಧರಣಿ ನಡೆಸಿದರು
ಮಾಸ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಧರಣಿ ನಡೆಸಿದರು   

ಮಾಲೂರು: ತಾಲ್ಲೂಕಿನ ಮಾಸ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿರುವ ಪ್ರಕರಣ ನಡೆದಿದೆ. ಮೃತರನ್ನು ತಾಲ್ಲೂಕಿನ ರಾಯಸಂದ್ರ ಗ್ರಾಮದ ಅನುಸೂಯ (22) ಎಂದು ಗುರುತಿಸಲಾಗಿದೆ. ತಾಲ್ಲೂಕಿನ ರಾಯಸಂದ್ರ ಗ್ರಾಮದ ಅನುಸೂಯ ಅವರಿಗೆ ಮಂಗಳವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಮಾಸ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪತಿ ಮುನಿರಾಜು ದಾಖಲಿಸಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ತೇಜಸ್ವಿನಿ ರಾತ್ರಿ ಪಾಳೆಯದಲ್ಲಿ ಗೈರು ಹಾಜಾರಾಗಿದ್ದರು ಎನ್ನಲಾಗಿದೆ. ಸಿಬ್ಬಂದಿ ಯಾವುದೇ ಚಿಕಿತ್ಸೆ ನೀಡಿದೆ ಬೆಳಗಿನ ಜಾವದವರೆಗೂ ಆಸ್ಪತ್ರೆಯಲ್ಲಿ ಇರಿಸಿಕೊಂಡಿದ್ದು, ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾರ್ಗ ಮಧ್ಯದಲ್ಲಿ ಗರ್ಭಣಿ ಮಹಿಳೆ ಅನುಸೂಯ ಮೃತಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಗ್ರಾಮಸ್ಥರಿಂದ ರಸ್ತೆ ತಡೆ: ಗರ್ಭಿಣಿ ಅನುಸೂಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರಾಯಸಂದ್ರ ಹಾಗು ಮಾಸ್ತಿ ಗ್ರಾಮಸ್ಥರು ಮಾಸ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ADVERTISEMENT

ಗರ್ಭಿಣಿ ಶವವನ್ನು ಆಸ್ಪತ್ರೆಯ ಮುಂಭಾಗದಲ್ಲಿ ಇರಿಸಿ ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರುವವರೆಗೂ ಪಟ್ಟು ಬಿಡದೆ ಪ್ರತಿಭಟನಾಕಾರರು ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಸುಮಾರು 2 ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಆಸ್ಪತ್ರೆಯ ಸುತ್ತ ಮುತ್ತ ಬಿಗುವಿನ ವಾತವರಣ ಮೂಡಿತ್ತು.

ಜಿಲ್ಲಾ ಆರೋಗ್ಯಾಧಿಕಾರಿ ವಿಜಯ ಕುಮಾರ್ ಮತ್ತು ಡಿವೈಎಸ್ ಪಿ ಅಬ್ದುಲ್ ಸತ್ತಾರ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕರರನ್ನು ಸಮಾಧಾನಗೊಳಿಸಿದರು. ಆರೋಗ್ಯ ಕೇಂದ್ರಲ್ಲಿ ರಾತ್ರಿ ಪಾಳೆಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯ ಮೇಲೆ ಸಂಪೂರ್ಣ ತನಿಖೆ ನಡೆಸಲಾಗುವುದು. ತನಿಖೆಯ ನಂತರ ತಪ್ಪಿತಸ್ಥರ
ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು
ಡಿವೈಎಸ್ ಪಿ ಅಬ್ದುಲ್ ಸತ್ತಾರ್ ತಿಳಿಸಿದ್ದಾರೆ.

ವೈದ್ಯೆ ಮತ್ತು ಸಿಬ್ಬಂದಿಯ ಮೇಲೆ ದೂರು ದಾಖಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಆದರೆ ಪೊಲೀಸರು ಏನು ಮಾಡಿದ್ದಾರೆ ಎಂದು ನನಗೆ ತಿಳಿದಿಲ್ಲ ಎಂದು ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಹಾರಿಕೆ ಉತ್ತರ ನೀಡುತ್ತಾರೆ. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ವಿ.ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ಕೃಷ್ಣ ಕುಮಾರ್, ಮಾಜಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಎಚ್.ಚನ್ನರಾಯಪ್ಪ ಇದ್ದರು.

ಲಾಠಿ ಪ್ರಹಾರ

ಗರ್ಭಿಣಿ ಮಹಿಳೆ ಸಾವಿಗೆ ಕಾರಣರಾದ ಆಸ್ಪತ್ರೆಯ ಸಿಬ್ಬಂದಿಯನ್ನು ಕೆಲಸದಿಂದ ವಜಗೊಳಿಸಬೇಕು ಎಂದು ಒತ್ತಾಯಿಸಿ ಹಾಗೂ ಸ್ಥಳಕ್ಕೆ ಜಿಲ್ಲಾ ಆರೋಗ್ಯ ಆಡಳಿತಾಧಿಕಾರಿ ಬರಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.