ADVERTISEMENT

ಆರೋಪಿಗಳ ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 8:31 IST
Last Updated 20 ಫೆಬ್ರುವರಿ 2018, 8:31 IST

ಕೋಲಾರ: ದಲಿತ ಸಮುದಾಯಗಳಿಗೆ ರಕ್ಷಣೆ ನೀಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎಂದು ಸೋಮವಾರ ಧರಣಿ ನಡೆಸಿದರು.

ಶೋಷಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ ರಾಜಾರೋಷವಾಗಿ ಸಮಾಜದಲ್ಲಿ ಓಡಾಡುತ್ತಿದ್ದರು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಬೇಕು ಎಮದು ಒತ್ತಾಯಿಸಿದರು.

ರಾಜ್ಯ ಆರ್‌ಪಿಐ ಯುವ ಘಟಕದ ಅಧ್ಯಕ್ಷ ಅಂಬರೀಶ್ ಮಾತನಾಡಿ, ‘ಜಿಲ್ಲೆಯಲ್ಲಿ ಶೇ 35ರಷ್ಟು ಮಂದಿ ದಲಿತರಿದ್ದು, ಅವರಿಗೆ ರಕ್ಷಣೆ ಇಲ್ಲದಂತಾಗಿದೆ. ಮೇಲ್ವರ್ಗದವರು ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯ, ವಂಚನೆ, ಶೋಷಣೆ ನಡೆಸುತ್ತಿದ್ದರು ಪೊಲೀಸ್‌ ಅಧಿಕಾರಿಗಳು ಮೌನವಹಿಸಿದ್ದಾರೆ’ ಎಂದು ದೂರಿದರು.

ADVERTISEMENT

ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿಗಳ ಸಮೇತ ದೂರು ನೀಡಿದ್ದರು ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಬಂಗಾರಪೇಟೆ ತಾಲ್ಲೂಕಿನ ಕುನ್ಕುಂದ ಗ್ರಾಮದ ಸರ್ವಣಿಯ ಜಾತಿಗೆ ಸೇರಿದ ತಾಲ್ಲೂಕು ಪಂಚಾಯಿತಿ ಸದಸ್ಯ, ಪರಿಶಿಷ್ಟ ಪಂಗಂಡಕ್ಕೆ ಸೇರಿದ ಮಹಿಳೆಯ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಗಾಯಗೊಂಡಿರುವ ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಲ್ಲೆಕೋರನ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೆಜಿಎಫ್‌ ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಮಡಿವಾಳ ಗ್ರಾಮ ಪಂಚಾಯಿತಿ ಸದಸ್ಯೆಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ಸದಸ್ಯೆಯ ಪತ್ನಿ ಅಧ್ಯಕ್ಷನನ್ನು ಪ್ರಶ್ನಿಸಿದ ಕಾರ‌ಣ ಹಲ್ಲೆ ನಡಸಿದ್ದಾರೆ. ಈ ಕುರಿತು ಬೇತಮಂಗಲ ಠಾಣೆಗೆ ದೂರು ನೀಡಿದ್ದರು, ಪೊಲೀಸರು ಆರೋಪಿಗಳನ್ನು ಬಂಧಿಸದೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಡಳಿತ ಎರಡು ಮೂರು ದಿನಗಳಲ್ಲಿ ಯಾವುದೇ ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿಯ ಸಂಘಟಕ ಟಿ.ವಿಜಿಕುಮಾರ್, ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ಪದಾಧಿಕಾರಿಗಳಾದ ಕೆ.ಸಿ.ನಾರಾಯಣಸ್ವಾಮಿ, ಬ್ಯಾಟಪ್ಪ, ತಿಮ್ಮರಾಯಪ್ಪ, ಕೃಷ್ಣಪ್ಪ, ವಿ. ನಾರಾಯಣಸ್ವಾಮಿ, ಶ್ರೀನಿವಾಸ್, ರಮೇಶ್, ಸೀನಪ್ಪ, ವೆಂಕಟರವಣ, ಆಶೋಕ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.