ADVERTISEMENT

ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2018, 13:13 IST
Last Updated 21 ಜುಲೈ 2018, 13:13 IST

ಕೋಲಾರ: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿದ್ದು, ಕ್ಷೇತ್ರದ ಮತದಾರರು ನನ್ನನ್ನು ಆಶೀರ್ವದಿಸುತ್ತಾರೆ’ ಎಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ 8 ವರ್ಷಗಳಿಂದ ಸತತ ಹೋರಾಟ ಮಾಡುತ್ತಾ ದಲಿತರು, ಹಿಂದುಳಿದವರು ಹಾಗೂ ಹಾಗೂ ಶೋಷಿತರ ಧ್ವನಿಯಾಗಿದ್ದೇನೆ. ಸಂಘಟನೆ ಮೂಲಕ ಈವರೆಗೆ 72 ಹೋರಾಟ ನಡೆಸಲಾಗಿದೆ ಮತ್ತು 39 ಅಂತರ್ಜಾತಿ ವಿವಾಹ ಮಾಡಿಸಿದ್ದೇನೆ. ಈ ಜನಪರ ಕಾರ್ಯಗಳೇ ನನಗೆ ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿವೆ’ ಎಂದು ಹೇಳಿದರು.

‘ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸಿ ಜನಪರವಾಗಿ ಕೆಲಸ ಮಾಡಿದ್ದೇನೆ. ಸರ್ಕಾರದ ಸೌಲಭ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಿದ್ದೇನೆ. ಬಡತನ ನಿರ್ಮೂಲನೆ, ಅಸಮಾನತೆ ತೊಡೆದು ಹಾಕಲು ಹೋರಾಟ ಮಾಡುತ್ತಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಯುವ ಹಾಗೂ ಮಹಿಳಾ ಮತದಾರರು ನನ್ನನ್ನು ಬೆಂಬಲಿಸುವ ವಿಶ್ವಾಸವಿದೆ’ ಎಂದು ತಿಳಿಸಿದರು.

ADVERTISEMENT

ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಸಂಪತ್, ಪ್ರಚಾರ ಸಮಿತಿ ಅಧ್ಯಕ್ಷ ನವೀನ್ ಮಹಾರಾಜ್, ಜಿಲ್ಲಾ ಘಟಕದ ಗೌರವಾಧ್ಯಕ್ಷ ಮಂಜುನಾಥ್, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಸ್.ಸುಮನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.