ಕೊಪ್ಪಳ: ‘ಕೆರೆ, ಬಾವಿ ಅಭಿವೃದ್ಧಿಪಡಿಸುವ ಮೂಲಕ ಜೀವಜಲದ ಸಂರಕ್ಷಣೆಗೆ ಸರ್ಕಾರ ಮುಂದಾಗಿದೆ’ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ವಿವಿಧ ಕಂಪೆನಿಗಳ ಸಹಭಾಗಿತ್ವದಲ್ಲಿ ತಾಲ್ಲೂಕಿನ ಹಿರೇಬಗನಾಳ ಕೆರೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
‘ಮಳೆಯ ಅಭಾವದಿಂದ ಕ್ಷೇತ್ರದ ಎಲ್ಲಾ ಕೆರೆಗಳು, ಕೊಳವೆಬಾವಿಗಳು ಬತ್ತಿವೆ. ಅಂತರ್ಜಲಮಟ್ಟ ಸಂಪೂರ್ಣ ಕುಸಿದಿದೆ. ಕೊಪ್ಪಳ ಹಾಗೂ ಯಲಬುರ್ಗಾ ತಾಲ್ಲೂಕಿನ ಎಲ್ಲಾ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹ 140 ಕೋಟಿ ಅನುದಾನ ಮಂಜೂರು ಮಾಡಿದೆ. ಗಂಗಾವತಿ, ಕನಕಗಿರಿ ಕ್ಷೇತ್ರಗಳಲ್ಲಿ ಕೆರೆ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ. ಮುಂದೆ ಮಳೆಯಿಂದ ತುಂಗಭದ್ರಾ ನದಿ ಭರ್ತಿಯಾದರೆ ಕೊಪ್ಪಳದ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದು ಅವರು ಹೇಳಿದರು.
25 ವರ್ಷಗಳಿಂದ ಹೂಳು ತುಂಬಿದ್ದ ಹಿರೇಬಗನಾಳ ಕೆರೆ ಅಭಿವೃದ್ಧಿಗೆ ನೆರವಾದ ವಿವಿಧ ಕಂಪೆನಿಗಳಿಗೆ ಅವರು ಕೃತಜ್ಞತೆ ಅರ್ಪಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ, ಗೂಳಪ್ಪ ಹಲಗೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹೇಮಣ್ಣ ದೇವರ ಮನಿ, ಮುಖಂಡರಾದ ಸುರೇಶ ಭೂಮರಡ್ಡಿ, ಜಡಿಯಪ್ಪ ಬಂಗಾಳಿ, ಭರಮಪ್ಪ ನಗರ, ವಕ್ತಾರ ಅಕ್ಬರ್ ಪಾಷಾ ಪಲ್ಟನ್ ಇದ್ದರು.
**
ಮಳೆಯಿಂದ ತುಂಗಭದ್ರಾ ನದಿ ಭರ್ತಿಯಾದರೆ ಕೊಪ್ಪಳದ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ ಅಭಿವೃದ್ಧಿಪಡಿಸಲಾಗುವುದು.
-ಕೆ.ರಾಘವೇಂದ್ರ ಹಿಟ್ನಾಳ, ಶಾಸಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.