ADVERTISEMENT

ಪ್ರತಿ ಶ್ರಮದ ಹಿಂದೆ ಪ್ರತಿಫಲ

ಖೇಲೋ ಇಂಡಿಯಾ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೆ.ಎಂ. ಪಾಟೀಲ್‌

​ಪ್ರಜಾವಾಣಿ ವಾರ್ತೆ
Published 10 ಜನವರಿ 2017, 8:57 IST
Last Updated 10 ಜನವರಿ 2017, 8:57 IST
ಕೊಪ್ಪಳ: ಪ್ರತಿ ಶ್ರಮದ ಹಿಂದೆ ಪ್ರತಿಫಲ ಇದ್ದೇ ಇರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಸತತ ಪರಿಶ್ರಮದ ಮೂಲಕ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕ ಕೆ.ಎಂ.ಪಾಟೀಲ್‌ ಹೇಳಿದರು. 
 
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   
 
ಕ್ರೀಡಾಕೂಟದಲ್ಲಿ ಮೂರು ಕ್ರೀಡೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ಈ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಉಡುಪಿಯಲ್ಲಿ ಜ.13ರಂದು ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಅಲ್ಲಿ ಪ್ರಥಮ ಸ್ಥಾನ ಪಡೆದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುತ್ತಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಶ್ರಮ ವಹಿಸಿ, ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದರು.
 
ಕ್ರೀಡಾಜ್ಯೋತಿ ಬೆಳಗಿಸಿ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ವಿಠ್ಠಲ್‌ ಬೈಲವಾಡ, ಕೇಂದ್ರ ಸರ್ಕಾರ ಖೇಲೋ ಇಂಡಿಯಾ ಮೂಲಕ ದೇಶದ ಶ್ರೇಷ್ಠ ಕ್ರೀಡಾಪಟುಗಳನ್ನು ಆಯ್ದು ಮುಂಬರುವ ಒಲಿಂಪಿಕ್‌ ಕ್ರೀಡಾಕೂಟಕ್ಕೆ ಅವರನ್ನು ತಯಾರು ಮಾಡುತ್ತಿದೆ. ಪ್ರಧಾನಿ ಮೋದಿ ಅವರ ಈ ದೂರದೃಷ್ಟಿ ಪ್ರಶಂಸನೀಯ. ಇದರಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನೇರವಾಗಿ ರಾಜ್ಯಮಟ್ಟದಲ್ಲಿ ಭಾಗವಹಿಸಿ, ನಂತರ ರಾಷ್ಟ್ರಮಟ್ಟದಲ್ಲಿ ಭಾಗವಹಿಸುವ ಅವಕಾಶ ಪಡೆಯುತ್ತಾರೆ. ನಮ್ಮ ಜಿಲ್ಲೆಯಿಂದ 14 ಮತ್ತು 17 ವರ್ಷದೊಳಗಿನ ಕ್ರೀಡಾಪಟುಗಳು ಹುಮ್ಮಸ್ಸಿನಿಂದ ಭಾಗವಹಿಸಿದ್ದಾರೆ. ಇದು ಹೀಗೆ ಮುಂದುವರಿಯಲಿ ಎಂದರು. 
 
ಎಂಜಿನಿಯರ್‌ ಶ್ರೀಪಾದ ವೈದ್ಯ, ವಿನೋದ್‌ ವಸ್ತ್ರದ್‌, ವೀರಭದ್ರಯ್ಯ ಪೂಜಾರ, ಬಸವರಾಜ ಹೊರತಟ್ನಾಳ, ವಿರುಪಾಕ್ಷಪ್ಪ ಬಾಗೋಡಿ ಇದ್ದರು.
 
**
ಪ್ರಧಾನಿಯವರ ದೂರಾಲೋಚನೆ ಫಲವಾಗಿ ಖೇಲೋ ಇಂಡಿಯಾ ಮೂಲಕ ಒಲಿಂಪಿಕ್‌ ಕ್ರೀಡಾಕೂಟಕ್ಕೆ ತರಬೇತಿ ನೀಡಲಾಗುತ್ತಿದೆ
-ವಿಠ್ಠಲ್‌ ಬೈಲವಾಡ, ಅಧ್ಯಕ್ಷ, 
ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.