ಕೊಪ್ಪಳ: ವಿಧಾನಸಭಾ ಚುನಾವಣೆಯ ಸೆಕ್ಟರ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ತೀವ್ರ ಕಟ್ಟೆಚ್ಚರ ವಹಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಶನಿವಾರ ವಿಧಾನಸಭೆ ಚುನಾವಣೆ ಸಂಬಂಧ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಿಗೆ ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್ಗಳಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
'ವಿಧಾನಸಭಾ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ನೇಮಿಸಲಾಗಿರುವ ಸೆಕ್ಟರ್ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಸೆಕ್ಟರ್ ಅಧಿಕಾರಿಗಳು ಈಗಾಗಲೇ ಮತಗಟ್ಟೆಗಳ ಸ್ಥಿತಿ-ಗತಿ, ಮೂಲಸೌಕರ್ಯ ಮುಂತಾದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಸಮರ್ಪಕವಾಗಿ ಒದಗಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಅದೇ ರೀತಿ ಸೆಕ್ಟರ್ ಅಧಿಕಾರಿಗಳು ಆಯಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯ ಪಾಲನೆ, ಉಲ್ಲಂಘನೆ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸಿದ್ದಾರೆ' ಎಂದರು.
ಆಯಾ ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ, ಅಭ್ಯರ್ಥಿ, ಅಥವಾ ಪಕ್ಷಗಳು ಪ್ರಚಾರ ಮಾಡುವುದನ್ನು ನಿಷೇಧಿಸಿದ್ದು, ಈ ಕುರಿತಂತೆ ಸೆಕ್ಟರ್ ಅಧಿಕಾರಿಗಳು ನಿಗಾ ವಹಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಬೆಳಿಗ್ಗೆ 6ಕ್ಕೆ ಅಣಕು ಮತದಾನ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಮತಯಂತ್ರಗಳ ಕಾರ್ಯನಿರ್ವಹಣೆ ಕುರಿತು ಯಾವುದೇ ಸಮಸ್ಯೆಗಳು ತಲೆದೋರಿದಲ್ಲಿ, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮತದಾನ ಪ್ರಕ್ರಿಯೆ ಸುಗಮವಾಗಿ ಮುಂದುವರಿಯುವಂತೆ ಮಾಡಬೇಕು ಎಂದರು.
**
ಮತಗಟ್ಟೆಯ ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳು, ಮತದಾನ ಸಿಬ್ಬಂದಿಗಳಿಗೆ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ಹಾಗೂ ನಿರ್ದೇಶನಗಳ ಬಗ್ಗೆ ಸೆಕ್ಟರ್ ಅಧಿಕಾರಿಗಳು ಅರಿವು ಹೊಂದಿರಬೇಕು
– ಎಂ.ಕನಗವಲ್ಲಿ, ಜಿಲ್ಲಾಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.