ಕುಷ್ಟಗಿ: ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ತಾಲ್ಲೂಕಿನ ಹಾಬಲಕಟ್ಟಿ ಗ್ರಾಮಸ್ಥರು ಇಲ್ಲಿಯ ತಹಶೀಲ್ದಾರ್ ಕಚೇರಿ ಬಳಿ ನಡೆಸುತ್ತಿರುವ ಧರಣಿ ಸೋಮವಾರ 55ನೇ ದಿನಕ್ಕೆ ಕಾಲಿಟ್ಟಿದೆ.
ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಸೋಮವಾರದಿಂದ 4 ದಿನಗಳ ಉಪವಾಸ ಸತ್ಯಾಗ್ರಹ ಮುಂದುವರಿಸಲು ನಿರ್ಧರಿಸಿದ್ದಾರೆ. ಈ ಕುರಿತು ತಹಶೀಲ್ದಾರ್ಗೆ ಲಿಖಿತ ಮಾಹಿತಿ ಸಲ್ಲಿಸಲು ಮುಂದಾದರೂ ಸ್ವೀಕರಿಸಲು ಅಧಿಕಾರಿಗಳು ನಿರಾಕರಿಸಿದರು ಎಂದು ಧರಣಿ ನಿರತರು ದೂರಿದರು. ಭೋವಿ ಸಮಾಜ ಸಂಘಟನೆ ತಾಲ್ಲೂಕು ಅಧ್ಯಕ್ಷ ಶರಣಪ್ಪ ಭೋವಿ, ಜಿಲ್ಲಾ ಅಧ್ಯಕ್ಷ ರಮೇಶ ಭೋವಿ ಇದ್ದರು.
ಲಿಖಿತ ಮನವಿ ಸ್ವೀಕರಿಸಲು ಯಾರೂ ನಿರಾಕರಿಸಿಲ್ಲ. ಉಪವಾಸ ಸತ್ಯಾಗ್ರಹ ನಡೆಸುವುದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಹಶೀಲ್ದಾರ್ ಎಂ.ಗಂಗಪ್ಪ ತಿಳಿಸಿದ್ದಾರೆ.
ಗಂಗಾಮತಸ್ಥರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಅವಕಾಶವಿಲ್ಲ ಎಂದು ಗ್ರೇಡ್ 2 ತಹಶೀಲ್ದಾರ್ ಆದೇಶ ನೀಡಿದ್ದಾರೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ಧರಣಿ ನಡೆಸುವುದು ಸರಿಯಲ್ಲ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.