ಕೊಪ್ಪಳ: ಸಾಮಾಜಿಕ ಜಾಲ ತಾಣಗಳಲ್ಲಿ ಬ್ರಾಹ್ಮಣ ಸಮಾಜವನ್ನು ಅವಹೇಳನ ಮಾಡುವವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ನಗರದ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಸಂಘದ ಜಿಲ್ಲಾ ಅಧ್ಯಕ್ಷ ಡಾ.ಕೆ.ಜಿ.ಕುಲಕರ್ಣಿ ಮಾತನಾಡಿ, ಶಾಂತಿ ಸಹಿಷ್ಣುತೆಯ ಬ್ರಾಹ್ಮಣ ಸಮಾಜವನ್ನು ಸಾರ್ವಜನಿಕವಾಗಿ ನಿಂದಿಸಲಾಗುತ್ತಿದೆ. ಹೋರಾಟದ ಹೆಸರಿನಲ್ಲಿ ವ್ಯಕ್ತಿಯೊಬ್ಬ ಬ್ರಾಹ್ಮಣ ಸಮಾಜವನ್ನು ಅದರಲ್ಲೂ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಇಂಥವರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಿದೆ.
ಇಂಥ ವ್ಯಕ್ತಿಯನ್ನು ಸೈಬರ್ ಅಪರಾಧ ತಡೆ ಕಾನೂನಿನ ಅಡಿ ಬಂಧಿಸಬೇಕು. ಇಲ್ಲವಾದಲ್ಲಿ ಬ್ರಾಹ್ಮಣ ಸಮಾಜ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ನಗರದ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆಯ ಮೂಲಕ ಸಾಗಿದ ಸಮಾಜದವರು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಭೀಮಸೇನರಾವ್ ಬನ್ನಿಗೋಳ, ಅನಂತಾಚಾರ್ ಕಾಶಿ, ಪ್ರಮೋದ ಕುಲಕರ್ಣಿ, ವೇಣುಗೋಪಾಲ ಜಾಗೀರದಾರ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.