ಮದ್ದೂರು: ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಹೈನುಗಾರಿಕೆ ವರದಾನವಾಗಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕದಲೂರು ರಾಮಕೃಷ್ಣ ತಿಳಿಸಿದರು.ಸಮೀಪದ ಮಾಚಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಸಂಘವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ 20ಕ್ಕೂ ಹೆಚ್ಚು ಹಾಲು ಉತ್ಪಾದಕರ ಮಹಿಳಾ ಸಂಘಗಳನ್ನು ಆರಂಭಿಸಿದ್ದೇವೆ. ಒಕ್ಕೂಟದಿಂದ ಉತ್ಪಾದಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಧನ ಸಹಾಯ, ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 65 ಸಾವಿರ ರಾಸುಗಳಿಗೆ ₹ 5 ಕೋಟಿ ವೆಚ್ಚದಲ್ಲಿ ವಿಮೆ ಮಾಡಿಸಿದ್ದೇವೆ. ರೈತ ಸಂಜೀವಿನಿ ಅಡಿಯಲ್ಲಿ ಸಹಾಯ ಹಸ್ತ ನೀಡುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಉತ್ಪಾದಕರಿಗೆ ನೀಡಲಾಗುತ್ತಿದೆ. ಈ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಒಕ್ಕೂಟಕ್ಕೆ ಗುಣಮಟ್ಟ ಹಾಲು ಪೂರೈಕೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು, ಮನ್ಮುಲ್ ನಿರ್ದೇಶಕ ಕೆ.ಎಂ. ಉಮೇಶ್, ಉಪ ವ್ಯವಸ್ಥಾಪಕ ರಾಮಕೃಷ್ಣ, ವಿಸ್ತರಣಾಧಿಕಾರಿ ಎಲ್. ಹರೀಶ್ ಹೆಗಡೆ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣ, ಸಂಘದ ಉಪಾಧ್ಯಕ್ಷೆ ಪುಟ್ಟತಾಯಮ್ಮ, ನಿರ್ದೇಶಕಿ ಪಾರ್ವತಮ್ಮ, ಮಂಗಳಮ್ಮ, ಕಾರ್ಯದರ್ಶಿ ಸುಶ್ಮಿತಾ, ಹಾಲು ಪರೀಕ್ಷಕಿ ರಾಧಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.