ಮಂಡ್ಯ: ಕೃಷಿಯಲ್ಲಿ ತೊಡಗುವ ಮುನ್ನ ರೈತರು ತಜ್ಞರಿಂದ ಮಾಹಿತಿ ಪಡೆಯಬೇಕು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಎಚ್.ಶಿವಣ್ಣ ಸಲಹೆ ನೀಡಿದರು.
ತಾಲ್ಲೂಕಿನ ವಿ.ಸಿ. ಫಾರಂನ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಶುಕ್ರವಾರ ನಡೆದ ಕೃಷಿ ಯಂತ್ರೋಪಕಣ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಕಾರ್ಮಿಕರ ಅಭಾವದ ಹಿನ್ನೆಲೆಯಲ್ಲಿ ತಂತ್ರಜ್ಞಾನದಿಂದ ಕೂಡಿದ ಕೃಷಿ ಸಲಕರಣೆಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ಕಾರ್ಮಿಕರ ಸಮಸ್ಯೆ ಪರಿಹರಿಸಿಕೊಳ್ಳಬಹುದು. ಯಂತ್ರಗಳ ಸಂಪೂರ್ಣ ಮಾಹಿತಿ ಪಡೆದು ಬಳಸಿಕೊಳ್ಳಬೇಕು ಎಂದರು.
ರೈತರು ಹಾಗೂ ಕೃಷಿ ತಜ್ಞರು ಒಂದಾಗಿ ಕೆಲಸ ಮಾಡಿದಾಗ ಮಾತ್ರ ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಬಹುದು. ಉತ್ತಮ ಇಳುವರಿಯನ್ನೂ ಪಡೆಯಲು ಸಹಕಾರಿ ಆಗುತ್ತದೆ ಎಂದು ಹೇಳಿದರು.
ಕೇವಲ ಕಬ್ಬು, ಭತ್ತ ಬೆಳೆಯುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತೀರಿ. ಏಕ ಬೆಳೆಯಿಂದಲೂ ನಷ್ಟ ಆಗಲಿದೆ. ಅದನ್ನು ಬಿಟ್ಟು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳಬೇಕು. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಬಹುದು ಎಂದು ಸಲಹೆ ಮಾಡಿದರು.
ಕೃಷಿ ಯಂತ್ರೋಪಕರಣಗಳನ್ನು ಸರ್ಕಾರವು ರಿಯಾಯಿತಿ ದರದಲ್ಲಿ ಒದಗಿಸುತ್ತಿದೆ. ಖರೀದಿಗೂ ಅನುಕೂಲ ಮಾಡಿಕೊಡಲಾಗಿದೆ. ಈ ಕುರಿತು ನಬಾರ್ಡ್ನಿಂದ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ವಿಸ್ತರಣಾ ನಿರ್ದೇಶಕ ಡಾ.ಕೆ.ಜಗದೀಶ್ವರ, ಕೃಷಿ ವಿಭಾಗದ ಮುಖ್ಯಸ್ಥ ಪಿ.ಶಿವಶಂಕರ್, ವಲಯ ಕೃಷಿ ಸಂಶೋಧನಾ ಕೇಂದ್ರ ನಿರ್ದೇಶಕ ರವಿಶಂಕರ್, ಕೃಷಿ ಪರಿಶೋಧಕಿ ಎಂ.ಎಸ್. ಶ್ರೀದೇವಿ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.