ADVERTISEMENT

ಖಾಸಗಿ ಆಸ್ಪತ್ರೆಗಳು ಬಂದ್‌

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 5:54 IST
Last Updated 17 ನವೆಂಬರ್ 2017, 5:54 IST

ಮದ್ದೂರು: ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದ ಬಹುತೇಕ ಎಲ್ಲ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳನ್ನು ಮುಚ್ಚಲಾಗಿತ್ತು. ಜೊತೆಗೆ ರಕ್ತ ಪರೀಕ್ಷಾ ಕೇಂದ್ರಗಳು ಮುಚ್ಚಿದ್ದವು. ಹೀಗಾಗಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಂತಿದ್ದು ಕಂಡು ಬಂತು.

ಖಾಸಗಿ ಆಸ್ಪತ್ರೆಗಳ ವಿರುದ್ಧ ರೋಗಿಗಳ ಪ್ರತಿಭಟನೆ
ಮದ್ದೂರು: ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರ ಖಂಡಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ವೈದ್ಯರ ಧನ ದಾಹ, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಘೋಷಣೆ ಕೂಗಿದ ಅವರು, ಕೂಡಲೇ ಸರ್ಕಾರ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ಜಾರಿಗೊಳಿಸಬೇಕು. ಬಡ ರೋಗಿಗಳ ಹಿತರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಎಸ್.ಅಶೋಕ್, ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚನ್ನಸಂದ್ರ ಲಕ್ಷ್ಮಣ್, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ರವಿ, ಮಾಜಿ ಪುರಸಭಾ ಉಪಾಧ್ಯಕ್ಷ ಇಂತಿಯಾಜ್‌ ವುಲ್ಲಾಖಾನ್, ಮುಖಂಡರಾದ ಮುನ್ನಾ, ಮಹಮದ್ ರಫೀಕ್, ಫೈರೋಜ್‌ಖಾನ್‌, ಮಹಮದ್‌ಪಾಷ, ನಾಸೀರ್‌ಪಾಷ, ಮೆಹಬೂಬ್‌ ಇದ್ದರು.

ಕೆಪಿಎಂಇ ಕಾಯ್ದೆ ಜಾರಿಗೆ ಯುವ ಜೆಡಿಎಸ್‌ ಆಗ್ರಹ
ಮದ್ದೂರು: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ (ಕೆಪಿಎಂಇ)ಯನ್ನು ಸರ್ಕಾರವು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಖಾಸಗಿ ಆಸ್ಪತ್ರೆಗಳ ಧನದಾಹಿ ವ್ಯವಸ್ಥೆಗೆ ನಿಯಂತ್ರಣ ಹಾಕಬೇಕು ಎಂದು ಜೆಡಿಎಸ್ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬ್ಯಾಡರಹಳ್ಳಿ ಶಿವಕುಮಾರ್ ಆಗ್ರಹಿಸಿದ್ದಾರೆ.

ಕಾಯ್ದೆ ಜಾರಿಗೆ ಮುನ್ನವೇ ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ರೋಗಿಗಳ ಹಿತ ಮರೆತು ಮುಷ್ಕರ ನಿರತರಾಗಿದ್ದು, 19ಕ್ಕೂ ಹೆಚ್ಚು ರೋಗಿಗಳ ಸಾವಿಗೆ ಕಾರಣರಾಗಿರುವ ವೈದ್ಯ ಸಿಬ್ಬಂದಿಯ ಮೇಲೆ ಕೂಡಲೇ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಡ ಜನರ ಪರವಾಗಿರುವ ಕಾಯ್ದೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ಜತೆಗೆ ರೋಗಿಗಳ ಹಿತ ರಕ್ಷಣೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.