ಮಂಡ್ಯ: ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿ ಪ್ರವಾಸಿ ತಾಣವನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು. ಗಗನಚುಕ್ಕಿ ಪ್ರದೇಶದ ಆವರಣದಲ್ಲಿ ಗುರುವಾರ ನಡೆದ ಗಗನಚುಕ್ಕಿ ಪ್ರದೇಶಾಭಿವೃದ್ಧಿ ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಗಗನಚುಕ್ಕಿ ಪ್ರದೇಶದ ಅಭಿವೃದ್ಧಿ ಹೊಂದಲು ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಬರಬೇಕಾದರೆ ಸುಂದರ ವಾತಾವರಣ ಕಲ್ಪಿಸಬೇಕು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಗಗನಚುಕ್ಕಿ ಪ್ರದೇಶವನ್ನು ಅಭಿವೃದ್ಧಿ ಉಪ ವಿಭಾಗದ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಯ 15 ಅಧಿಕಾರಿಗಳ ಗಗನಚುಕ್ಕಿ ಪ್ರದೇಶಾಭಿವೃದ್ಧಿ ನಿರ್ವಹಣಾ ಸಮಿತಿ ರಚಿಸಿದ್ದು, ಸಮಿತಿಯಲ್ಲಿರುವ ಪ್ರತಿಯೊಬ್ಬ ಅಧಿಕಾರಿಯೂ ಗಗನಚುಕ್ಕಿ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ರಾಜ್ಯ ಸರ್ಕಾರ ಗಗನಚುಕ್ಕಿ ಅಭಿವೃದ್ಧಿಗೆ ₹ 3.54 ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ. ಈಗಾಗಲೇ ₹ 1 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಮೆಟ್ಟಿಲು ನಿರ್ಮಾಣ, ರಸ್ತೆ ಅಗಲೀಕರಣ, ವಿಕ್ಷಣಾ ಗೋಪುರ ಸೇರಿದ್ದು, ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರವಾಸಿ ಸ್ನೇಹಿ ಹಾಗೂ ಮೂಲಸೌಲಭ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಗಗನಚುಕ್ತಿ ಪ್ರದೇಶದಲ್ಲಿ ಬೀದಿ ದೀಪಗಳು ಕೆಟ್ಟಿರುವ ಕುರಿತು ದೂರುಗಳಿವೆ. ಶೀಘ್ರ ಅವು ದುರಸ್ತಿಯಾಗಬೇಕಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಂದಾಯ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಸುರಕ್ಷತೆಗೆ ಕ್ರಮ ವಹಿಸಬೇಕಿದೆ.
ಈ ವರ್ಷ ಮಳೆ ಕಡಿಮೆಯಾಗಿರುವುರಿಂದ ಗಗನಚುಕ್ಕಿ ಜಲಾಪಾತೋತ್ಸವ ಕಾರ್ಯಕ್ರಮವನ್ನು ಕೈಬಿಡಲಾಗಿದೆ ಎಂದರು. ಮಂಡ್ಯ ಉಪ ವಿಭಾಗದ ಉಪವಿಭಾಗಾಧಿಕಾರಿ ರಾಜೇಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಹರೀಶ್, ಮಳವಳ್ಳಿ ತಹಶೀಲ್ದಾರ್ ದಿನೇಶ್ಚಂದ್ರ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.