ಕೆ.ಆರ್.ಪೇಟೆ: ‘ಉಗ್ರಗಾಮಿಗಳ ರಾಜ್ಯವನ್ನಾಗಿ ಮಾಡಿಸುವ ಉದ್ದೇಶ ದಿಂದಲೇ ವಿಧ್ವಂಸಕ ಕೃತ್ಯದಲ್ಲಿ ತೊಡಗಿ ರುವ ಕೆಡಿಎಫ್, ಕೆಎಫ್ಟಿಯಂತಹ ಅಪಾಯಕಾರಿ ಸಂಘಟನೆಗಳ ವಿರುದ್ಧ ದಾಖಲಾಗಿದ್ದ ನೂರಾರು ಪ್ರಕರಣಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂತೆಗೆದುಕೊಂಡಿದ್ದಾರೆ’ ಎಂದು ಶಾಸಕ ಸಿ.ಟಿ.ರವಿ ಗಂಭೀರ ಆರೋಪ ಮಾಡಿದರು.
ಗುರುವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೇ ದೇಶ ದ್ರೋಹ ಕೆಲಸ ಮಾಡಿರುವ ಬಗ್ಗೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ, ಗಲಾಟೆ– ಕೊಲೆಗಳನ್ನು ನಡೆಸುವ ಸಂಘಟನೆಗಳಿಗೆ ಪರವಾನಗಿ ನೀಡಿದ್ದಾರೆ. ಇದರ ಪರಿಣಾಮವೇ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಕೊಲೆಗಳಿಗೆ ಸರ್ಕಾರವೇ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಪೂರ್ಣ ಸಾಲ ಮನ್ನಾ ಮಾಡಲಿ: ‘ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಲ್ಲಿ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲ ಸಂಪೂರ್ಣ ಮನ್ನಾಮಾಡಲಾಗಿದೆ. ಆದರೆ, ನಮ್ಮ ಮುಖ್ಯಮಂತ್ರಿಗಳು ಕೇವಲ ಸಹಕಾರಿ ಬ್ಯಾಂಕ್ಗಳ ಸಾಲವನ್ನು 16 ನಿಬಂಧನೆಗಳೊಂದಿಗೆ ಮನ್ನ ಮಾಡಿದ್ದಾರೆ. ಇದು ಸರಿಯಾದುದಲ್ಲ’ ಎಂದು ಹೇಳಿದರು.
ಬೂತ್ ಮಟ್ಟದಲ್ಲಿ ಪ್ರಚಾರ: ’ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ಮಟ್ಟದಲ್ಲಿ ಪ್ರಚಾರ ಮಾಡಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗ ಅದನ್ನು ಕಾಂಗ್ರೆಸ್ ಕಾಪಿ ಮಾಡುತ್ತಿದೆ. ಆ ಪಕ್ಷದವರಿಗೆ ನಾಚಿಕೆಯಾಗಬೇಕು’ ಎಂದು ಕಿಡಿಕಾರಿದರು.
ರಾಜ್ಯದ ಎಲ್ಲ 54,635 ಬೂತ್ ಕೇಂದ್ರಗಳಿಗೂ ನಮ್ಮ ಕಾರ್ಯಕರ್ತರು ತೆರಳಿ ಪಕ್ಷ ಕಟ್ಟುವ ಕಾರ್ಯ ಮಾಡುತ್ತಿದ್ದಾರೆ. ಸ್ವಚ್ಛ ಭಾರತ್, ಪರಿಸರ ಸಂರಕ್ಷಣೆ ಮತ್ತು ಜಲ ಸಂರಕ್ಷಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬೂಕಹಳ್ಳಿ ಮಂಜು, ಸಹಕಾರ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ತೋಟಪ್ಪಶೆಟ್ಟಿ, ರಾಜ್ಯ ಬಿಜೆಪಿ ಮುಖಂಡ ಲಕ್ಷ್ಮಣ್, ಮಂಜು ನಾಥ, ಸಿಂದಘಟ್ಟ ಅರವಿಂದ್, ಕೆ.ಜೆ.ವಿಜಯಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.