ಶ್ರೀರಂಗಪಟ್ಟಣ: ತಾಲ್ಲೂಕಿನ ಪ್ರಸಿದ್ಧ ಆರತಿಉಕ್ಕಡದ ಅಹಲ್ಯಾದೇವಿ ದೇವಾಲಯಕ್ಕೆ 8 ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಆರ್. ನಂಜೇಗೌಡ ತಿಳಿಸಿದರು.
ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಮುಖ ಮಂಟಪದ ಬಳಿ 2, ತಡೆ ಒಡೆಯುವ ಸ್ಥಳ, ಭಕ್ತರ ಸರತಿ ಸಾಲು, ಕಾಯಿ ಒಡೆಯುವ ಸ್ಥಳ, ಕಟ್ಟೆ ಒಡೆಯುವ ಸ್ಥಳ, ಮೊಟ್ಟೆ ಒಡೆಯುವ ಸ್ಥಳ ಹಾಗೂ ಕಚೇರಿಯಲ್ಲಿ ತಲಾ ಒಂದೊಂದು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಅದಕ್ಕಾಗಿ ₹ 1 ಲಕ್ಷ ಹಣ ಖರ್ಚು ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.
‘ದೇವಾಲಯಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಮೂಲ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ. ಆದರೆ, ಸ್ಥಳೀಯರು ಅಗತ್ಯ ಸಹಕಾರ ನೀಡುತ್ತಿಲ್ಲ. ಪೂಜಾ ವಿಧಿ, ವಿಧಾನಗಳಿಗೆ ದರಪಟ್ಟಿ ಅಳವಡಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲೂ ವಿರೋಧ ಬಂದಿದೆ. ಹೀಗಾದರೆ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ’ ಎಂದು ಅವರು ಹೇಳಿದರು.
‘ಅಹಲ್ಯಾದೇವಿ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ಹಾಗಾಗಿ, ಪ್ರಕರಣ ಇತ್ಯರ್ಥ ಆಗುವವರೆಗೆ ಯಥಾಸ್ಥಿತಿ ಕಾಪಾಡಬೇಕು. ಹಿಂದುಳಿದ ವರ್ಗದ ಜನರಿಗೆ ಸೇರಿದ ಈ ದೇವಾಲಯ ಹತ್ತಾರು ವರ್ಷಗಳ ಕಾಲ ಟ್ರಸ್ಟ್ ಸುಪರ್ದಿಯಲ್ಲಿತ್ತು. ಆಗ ಯಾವುದೇ ದರಪಟ್ಟಿ, ಸಿ.ಸಿ.ಟಿ.ವಿ ಕ್ಯಾಮೆರಾ ಇಲ್ಲದಿದ್ದರೂ ವ್ಯವಸ್ಥಿತವಾಗಿ ಧಾರ್ಮಿಕ ಕೈಂಕರ್ಯ ನಡೆಯುತ್ತಿತ್ತು. ಅರ್ಚಕರು ಮತ್ತು ವ್ಯಾಪಾರಿಗಳನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅನುಮಾನದಿಂದ ನೋಡುತ್ತಿದ್ದಾರೆ. ನಮ್ಮನ್ನು ವಿಶ್ವಾಸದಿಂದ ನಡೆಸಿಕೊಳ್ಳಬೇಕು’ ಎಂದು ಎಂ. ಚಂದ್ರು ಇತರರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.