ಮಳವಳ್ಳಿ: ವಿವಿಧತೆಯಲ್ಲಿ ಏಕತೆ ಸಾರುವ, ಪ್ರಪಂಚದಲ್ಲೇ ವಿಶಿಷ್ಟ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ಗುರುವಾರ ನಡೆದ 68ನೇ ಗಣರಾಜ್ಯೋತ್ಸವ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ವರ್ಷ ಬರಗಾಲ ತೀವ್ರ ವಾಗಿದ್ದು, ಇದನ್ನು ಸವಾಲಾಗಿ ಸ್ವೀಕರಿಸಿ ಜೀವನ ನಿರ್ವಹಣೆ ಮಾಡಬೇಕಿದೆ. ನೀರು, ಮೇವು ಇತರೆ ಮೂಲ ಸವಲತ್ತುಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ, ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಸಜ್ಜಾಗಿದೆ. ಕುಹಕ ಮಾತುಗಳಿಗೆ ಕಿವಿಗೊಡದೆ, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಎನ್.ವಿಶ್ವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಹಶೀಲ್ದಾರ್ ಎಚ್.ಎಸ್. ದಿನೇಶ್ ಚಂದ್ರ ಧ್ವಜಾರೋಹಣ ನೆರವೇರಿಸಿ ದರು. ರಾಷ್ಟ್ರೀಯ ಕಬಡ್ಡಿ ಜೂನಿಯರ್ ತಂಡದಲ್ಲಿ ಸ್ಥಾನ ಪಡೆದಿದ್ದ ಇಮ್ರಾನ್ ಷರೀಪ್ ಅವರನ್ನು ಸನ್ಮಾನಿಸಲಾಯಿತು.
ಪಥ ಸಂಚಲನದಲ್ಲಿ ಆದರ್ಶ ಪ್ರೌಢಶಾಲೆ (ಪ್ರಥಮ), ರೋಟರಿ ಶಾಲೆ (ದ್ವಿತೀಯ) ಹಾಗೂ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ (ತೃತೀಯ) ತಂಡಗಳಿಗೆ ಬಹುಮಾನ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಹನುಮಂತು, ಸದಸ್ಯರಾದ ಸಿ.ಸುಜಾತಾ, ಜಯಕಾಂತ, ಅಂಬರೀಷ್, ಮಾದು, ದೊಡ್ಡಯ್ಯ, ಪುರಸಭೆ ಅಧ್ಯಕ್ಷ ರಿಯಾಜಿನ್, ಡಿವೈಎಸ್ಪಿ ಮ್ಯಾಥ್ಯೂಥಾಮಸ್, ತಾಲ್ಲೂಕು ಪಂಚಾಯಿತಿ ಇಒ ಮಣಿಕಂಠ ಹಾಜರಿದ್ದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಿಂದ ಶಾಲಾ ಮಕ್ಕಳು, ಅಧಿಕಾರಿಗಳು, ಜನಪ್ರತಿನಿಧಿಗಳು ಮೆರವಣಿಗೆ ಮೂಲಕ ಕ್ರೀಡಾಂಗಣಕ್ಕೆ ಬಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.