ADVERTISEMENT

ಮನೆ ಮನೆ ಪ್ರಚಾರ ನಡೆಸಿದ ಅಶೋಕ್‌

​ಪ್ರಜಾವಾಣಿ ವಾರ್ತೆ
Published 23 ಜುಲೈ 2017, 10:13 IST
Last Updated 23 ಜುಲೈ 2017, 10:13 IST

ಶ್ರೀರಂಗಪಟ್ಟಣ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಜನ ಸಾಮಾನ್ಯರ ಪರ ಕೆಲಸ ಮಾಡುತ್ತಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರು ರಾಜ್ಯದಲ್ಲೂ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ ಮನವಿ ಮಾಡಿದರು.

ಕ್ಷೇತ್ರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ವಿಸ್ತಾರಕ್‌ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಚಂದಗಾಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಮನೆ ಮನೆಗೆ ಕೇಂದ್ರದ ಸರ್ಕಾರದ ಸಾಧನೆಗಳು ಹಾಗೂ ರಾಜ್ಯ ಸರ್ಕಾರದ ವೈಫಲ್ಯದ ಕರ ಪತ್ರ ಹಂಚಿ ಅವರು ಮಾತನಾಡಿದರು.

‘ಉಜ್ವಲ್‌ ಯೋಜನೆಯಡಿ ಪ್ರತಿ ಮನೆಗೆ ಅಡುಗೆ ಅನಿಲ ಸಂಪರ್ಕ, ಮೇಕ್‌ ಇನ್‌ ಇಂಡಿಯಾ ಮೂಲಕ ಉದ್ಯಮ ಕ್ಷೇತ್ರದ ಅಭಿವೃದ್ಧಿ, ಕಪ್ಪು ಹಣ ತಡೆಗೆ ಕ್ರಮ, ಜನ್‌ಧನ್‌ ಯೋಜನೆ, ಭೇಟಿ ಬಚಾವೋ ಭೇಟಿ ಪಡಾವೋ ಇತರ ಮಹತ್ವದ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ರಾಜ್ಯದಲ್ಲೂ ಅಭಿವೃದ್ಧಿ ಕೆಲಸಗಳು ಆಗಬೇಕಾದರೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು‘ ಎಂದರು.

ADVERTISEMENT

‘ರಾಜ್ಯದ ಕಾಂಗ್ರೆಸ್‌ ಸರ್ಕಾರ ರೈತರನ್ನು ಸಂಪೂರ್ಣ ಕಡೆಗಣಿಸಿದೆ. ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕುಡಿಯುವ ನೀರು, ವಿದ್ಯುತ್‌, ಜಾನುವಾರುಗಳಿಗೆ ಮೇವಿನ ಕೊರತೆ ಕಾಡುತ್ತಿದೆ. ಸರ್ಕಾರದ ಜನ ವಿರೋಧಿ ನೀತಿಯಿಂದ ಬೇಸತ್ತಿರುವ ಜನರು 2108ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಟಿ. ಶ್ರೀಧರ್‌, ಸಂಘಟನಾ ಕಾರ್ಯದರ್ಶಿ ಸುರೇಶ್‌ಬಾಬು, ತಾಲ್ಲೂಕು ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮೀ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರು, ಡಿ.ಸಿ. ಕುಮಾರ್‌, ಪೀಹಳ್ಳಿ ರಮೇಶ್‌, ಜಿ. ಉಮಾಶಂಕರ್‌, ಎಸ್‌ಸಿ ಮೋರ್ಚಾ ಅಧ್ಯಕ್ಷ ಸಿದ್ದಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.