ADVERTISEMENT

ಯಡಿಯೂರಪ್ಪ ಪ್ರವಾಸ, ದಲಿತರ ಮನೆ ಊಟ 15ಕ್ಕೆ

​ಪ್ರಜಾವಾಣಿ ವಾರ್ತೆ
Published 24 ಮೇ 2017, 7:14 IST
Last Updated 24 ಮೇ 2017, 7:14 IST

ಮಂಡ್ಯ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಜೂನ್‌ 15 ರಂದು ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಲಿದ್ದು ದಲಿತರ ಮನೆಗೆ ಭೇಟಿ ನೀಡಿ ಊಟ ಮಾಡಲಿದ್ದಾರೆ’ ಎಂದು ಮಾಜಿ ಸಚಿವ ಎಸ್‌.ಎ. ರಾಮದಾಸ್‌್ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮದ್ದೂರು, ನಾಗಮಂಗಲ, ಮಂಡ್ಯ ಸೇರಿ ವಿವಿಧ ತಾಲ್ಲೂಕುಗಳಲ್ಲಿ ಯಡಿಯೂರಪ್ಪ ಅವರು  ಬರ ಅಧ್ಯಯನ ನಡೆಸಲಿದ್ದಾರೆ. ರಾಜ್ಯದಲ್ಲಿ ಜನರು ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ರೈತರ ಸಮಸ್ಯೆ ಅರಿತುಕೊಳ್ಳದ ಕಾಂಗ್ರೆಸ್‌ ಸರ್ಕಾರ ರೈತರ ಹಿತ ಕಾಪಾಡಲು ಸೋತಿದೆ. ಇವೆಲ್ಲದಕ್ಕೂ ಪರಿಹಾರ ಸಿಗಬೇಕಾದರೆ ಬಿಜೆಪಿ ಪಕ್ಷ ಅಧಿಕಾರಿಕ್ಕೆ ಬರಬೇಕು ಎಂದು ಹೇಳಿದರು.

ADVERTISEMENT

ಉತ್ತರ ಪ್ರದೇಶದಲ್ಲಿ ಬಿಜೆಪಿ ಅಲೆ ಇರುವ ಹಾಗೆ ಕರ್ನಾಟಕದಲ್ಲೂ  ಬಿಜೆಪಿ ಅಲೆ ಸೃಷ್ಟಿಯಾಗುವ ಲಕ್ಷಣ ಗೋಚರಿಸುತ್ತಿದೆ. ಆ ಮೂಲಕ  ಬಿಜೆಪಿ ಅಧಿರಕ್ಕೆ ಬರಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಪರ ನಿಲವು ಹೊಂದಿದ್ದು ರೈತರ ಅಭಿವೃದ್ಧಿಗಾಗಿ ಹಲವು ಹೊಸ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ದುರಾಡಳಿತ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಕೆಲಸ ಮಾಡಬೇಕು. ಜನರ ಸಮಸ್ಯೆಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು.  ಪಕ್ಷ ಸಂಘಟನೆಯಲ್ಲಿ ತೊಡಗಿ ನಾಯಕರ ಕೈ ಬಲಪಡಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಗಣ್ಣಗೌಡ ಮಾತನಾಡಿ, ಕುಡಿಯುವ ನೀರು, ಬರ ಪರಿಹಾರ, ರೈತರ ಆತ್ಮಹತ್ಯೆ ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿಯೂ ಸೋತಿದೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಬರ ಅಧ್ಯಯನದಲ್ಲಿ ತೊಡಗಲಿದ್ದಾರೆ ಎಂದು ಹೇಳಿದರು.

ಬಿಜೆಪಿ ವಕ್ತಾರರಾದ ಸುಲೋಚನಾ ಭಟ್‌, ಮುಖಂಡರಾದ ಮಲ್ಲಿಕಾರ್ಜುನ, ಎಚ್‌.ಆರ್‌.ಅರವಿಂದ್‌್, ಎನ್‌.ಕೆ. ಕುಮಾರ್‌ ನಂದೀಪುರ, ಶಿವಸ್ವಾಮಿ, ವಿಜಯ್‌ಕುಮಾರ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.