ADVERTISEMENT

ವೈದ್ಯರ ಮೇಲೆ ಹಲ್ಲೆ: ಸಂಸದರ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜನವರಿ 2017, 9:17 IST
Last Updated 11 ಜನವರಿ 2017, 9:17 IST

ಮಂಡ್ಯ: ವೈದ್ಯರ ಮೇಲೆ ಹಲ್ಲೆ ನಡೆಸಿದ ಸಂಸದ ಅನಂತಕುಮಾರ್‌ ಹೆಗಡೆ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು   ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಸದಸ್ಯರು ನಗರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಈಚೆಗೆ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಜನಪ್ರತಿನಿಧಿಗಳೂ ಕೂಡ ವೈದ್ಯರ ಮೇಲೆ ದೌರ್ಜನ್ಯಕ್ಕೆ ಇಳಿಯುತ್ತಿದ್ದಾರೆ. ಸರ್ಕಾರವು ವೈದ್ಯರಿಗೆ ಸೂಕ್ತ ಭದ್ರತೆ ನೀಡಬೇಕು. ಇಲ್ಲವಾದರೆ, ವೈದ್ಯಕೀಯ ಸೇವೆ ಬಂದ್‌ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಿರಿಯ ವೈದ್ಯರ ಮೇಲೆ ಮೃತ ರೋಗಿಯ ಸಂಬಂಧಿಕರೂ ಹಲ್ಲೆ ಮಾಡಿದ್ದಾರೆ. ಬೆಂಗಳೂರು, ಮಂಡ್ಯ ಹಾಗೂ ಇತರೆ ಜಿಲ್ಲೆಗಳಲ್ಲಿ ವೈದ್ಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಸರ್ಕಾರವು ಇವುಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪ್ರಾಮಾಣಿಕ ವೈದ್ಯರ ರಕ್ಷಣೆ ಮಾಡದೇ ಹೋದರೆ ಖಾಸಗಿಯಾಗಿ ವೃತ್ತಿ ಮಾಡುತ್ತಿರುವ ನಮ್ಮನ್ನು ರಕ್ಷಣೆ ಮಾಡುವವರು ಯಾರು ಎಂದು ಪ್ರಶ್ನಿಸಿದರು.

ವೈದ್ಯರಾದ ಬಿ.ಎಸ್‌. ಕಕ್ಕಿಲಾಯ, ಗೋಪಾಲಕೃಷ್ಣ  ಗುಪ್ತ, ಜಗದೀಶ್‌ ಕುಮಾರ್‌, ಪ್ರಸನ್ನಕುಮಾರ್‌, ಶಶಿಧರ್‌  ಬಸವರಾಜ್‌, ರಾಘವೇಂದ್ರ, ರಮೇಶ್‌, ಕೃಷ್ಣಪ್ಪ, ಬೈಕಾಡಿ, ಪ್ರಕಾಶ್‌ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.