ಕೆ.ಆರ್.ನಗರ: ತಾಲ್ಲೂಕಿನಲ್ಲಿ 50 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಹಲವು ಕಾಮಗಾರಿ ನಾನು ಶಾಸಕನಾದ 10 ವರ್ಷದಲ್ಲಿ ಪೂರ್ಣಗೊಂಡಿವೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ಪಟ್ಟಣದ ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ (ಎಡಗೈ)ಯ ಕುಂದು– ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಬಡ ಕುಟುಂಬಗಳು ಹೆಚ್ಚಾಗಿ ವಾಸಿಸುತ್ತಿರುವ ಗ್ರಾಮಗಳ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಬಾಬು ಜಗಜೀವನರಾಂ ಸಮುದಾಯ ಭವನ ಪೂರ್ಣಗೊಳಿಸಲು ₹ 90 ಲಕ್ಷ ಮಂಜೂರಾಗಿದೆ ಎಂದರು.
ಹಲವು ಗ್ರಾಮಗಳಲ್ಲಿ ಬಾಬು ಜಗಜೀವನರಾಂ ಹಾಗೂ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. 25 ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ. ಮಹಿಳಾ ಸಂಘಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ, ಉಚಿತವಾಗಿ ಅಂಬ್ಯುಲೆನ್ಸ್, ಅಂಗವಿಲಕಲರಿಗೆ ವಿಮೆ ಬಾಂಡ್, ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ನೀಡಲಾಗುತ್ತಿದೆ ಎಂದರು.
ಹಲವಾರು ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಜನತೆಯ ಆರೋಗ್ಯ ಹಿತದೃಷ್ಠಿಯಿಂದ ಕೆಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ನಿರಂತರ ವಿದ್ಯುತ್, ಕೆರಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿ ಮಾಡಲಾಗಿದೆ ಎಂದರು.
ಹುಣಸೂರು ನಗರಸಭಾ ಸದಸ್ಯ ಸತೀಶ್ ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ ಹಾಗೂ ಮಾದಿಗ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮಧುವನಹಳ್ಳಿ ರವಿಕುಮಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಡಿ.ಸಿ.ಮಂಜುನಾಥ್, ಕಾರ್ಯದರ್ಶಿ ಕೆ.ಮಹದೇವ್, ಮೈಮುಲ್ ನಿರ್ದೇಶಕ ಎ.ಟಿ.ಸೋಮಸೇಖರ್, ಪುರಸಭೆ ಸದಸ್ಯರಾದ ಕೆ.ಎಲ್.ಜಗದೀಶ್, ಉಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಆನಂದ್, ಚಲುವರಾಜ್, ರಾಚಯ್ಯ, ಸುನಾಮಿ ಮಂಜು, ಸೋಮಣ್ಣ, ಮಾಜಿ ಸದಸ್ಯ ಸುರೇಶ್, ಮುಖಂಡರಾದ ಕಾಳಯ್ಯ, ಬಿ.ಎಚ್.ಕುಮಾರ್, ರಾಮನಾಥ್, ಎಚ್.ಎಂ.ಮಂಜು, ವಕೀಲ ಗೋವಿಂದರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.