ಮೈಸೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿ ಗ್ರಾಮದಲ್ಲಿ ರಾಯಣ್ಣನ ಶೌರ್ಯ, ಸಾಹಸ ಕುರಿತು ತರಬೇತಿ ನೀಡುವ ಸೈನಿಕ ಶಾಲೆ ತೆರೆಯಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.
ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ಕನಕದಾಸ ನೌಕರರ ಸಂಘ ಸೋಮವಾರ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ಕನಕ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ಸಂಗೊಳ್ಳಿ ಗ್ರಾಮದ ಹತ್ತಿರ ಈಗಾಗಲೇ ಜಮೀನು ಗುರುತಿಸಲಾಗಿದೆ. ಅಲ್ಲದೆ, ನಂದಗಡದಲ್ಲಿ ವಸ್ತುಸಂಗ್ರಹಾಲಯ ಹಾಗೂ ಕೆರೆ ಅಭಿವೃದ್ಧಿ ಮಾಡಲಾಗುವುದು. ಇದಕ್ಕೆಲ್ಲ ₹ 267 ಕೋಟಿ ಮೀಸಲಿಡಲಾಗಿದೆ. ಅಲ್ಲದೆ, ರಾಜ್ಯದ ವಿವಿಧೆಡೆ ಭವನ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೆ ₹ 175 ಕೋಟಿ ಅನುದಾನ ನೀಡಲಾಗಿದೆ ಎಂದರು.
ಮೈಸೂರಿನಲ್ಲಿ ಸಾರಿಗೆ ಇಲಾಖೆಗೆ ಸಮುದಾಯ ಭವನ ನಿರ್ಮಿಸಿಕೊಡಲು ವ್ಯವಸ್ಥೆ ಮಾಡುತ್ತೇನೆ. ಅಲ್ಲದೆ, ಇನ್ನಿತರ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು. ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ‘ಕನಕದಾಸರು ಸಮಾಜದ ಅಂಕುಡೊಂಕು ತಿದ್ದಿದವರು, ಮೌಢ್ಯ ನಿವಾರಣೆಗೆ ಶ್ರಮಿಸಿದರು’ ಎಂದರು.
ಯುಪಿಎಸ್ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿರುವ ಕೆಂಪಹೊನ್ನಯ್ಯ, ನಿಮಿಶಾಂಬ ಗೌಡ, ರಾಜ್ಯ ಪ್ರಶಸ್ತಿ ಪುರಸ್ಕೃತ ಸಿಪಿಐ ಸಿ.ತಿಮ್ಮರಾಜು, ಕಾರ್ಮಿಕ ಮುಖಂಡ ಎಂ.ಮಲ್ಲಯ್ಯ ಹಾಗೂ ಕೆಎಸ್ಆರ್ಟಿಸಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಹಾಗೂ ಪಿಯುನಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.