ಮೈಸೂರು: ಕೆ.ಆರ್.ಆಸ್ಪತ್ರೆ ಕೊಠಡಿಯಲ್ಲಿ ಕೂಡಿಹಾಕಿದ್ದ ಇಬ್ಬರು ಮಾನಸಿಕ ರೋಗಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ರೋಗಿಗಳನ್ನು ಸಾಮಾನ್ಯ ವಾರ್ಡ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ಬೆಳಿಗ್ಗೆ ಈ ಇಬ್ಬರು ವಾರ್ಡ್ನ ಇತರೆ ರೋಗಿಗಳಿಗೆ ಕಿರುಕುಳ ನೀಡಿದ್ದರು. ಇವರು ವಾರ್ಡಿನಲ್ಲೇ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದ ಕಾರಣ, ರೋಗಿಗಳಿಂದ ಪ್ರತಿರೋಧ ವ್ಯಕ್ತವಾಯಿತು.
ಇದರಿಂದ ಬೇಸತ್ತ ರೋಗಿಗಳೇ ಮಾನಸಿಕ ಅಸ್ವಸ್ಥರನ್ನು ಆಸ್ಪತ್ರೆಯ ಕೊಠಡಿಯೊಂದರಲ್ಲಿ ಕೂಡಿಹಾಕಿದ್ದರು. ಆಸ್ಪತ್ರೆಯ ಅಧೀಕ್ಷಕ ಡಾ.ಚಂದ್ರಶೇಖರ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯನ್ನು ನೀಡಿ ಚಿಕಿತ್ಸೆ ಮುಂದುವರಿಸಿದರು.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಾ.ಚಂದ್ರಶೇಖರ್, ‘ಆಸ್ಪತ್ರೆಯಲ್ಲಿ ಕೊಠಡಿಗಳ ಕೊರತೆ ಇರುವುದು ಕಾರಣವಾಗಿದೆ. ಆಸ್ಪತ್ರೆಗೆ ಸೇರುವ ರೋಗಿಗಳ ಸಂಖ್ಯೆ ಹೆಚ್ಚಿದೆ. ಆದರೆ, ಇರುವ ಕೊಠಡಿಗಳನ್ನು ಜಯದೇವ ಆಸ್ಪತ್ರೆಯೂ ಬಳಸಿಕೊಳ್ಳುತ್ತಿದೆ. ಇದರಿಂದಾಗಿ ಈ ರೀತಿಯ ಸಮಸ್ಯೆ ಉಂಟಾಗುತ್ತಿದೆ. ಇವರಿಬ್ಬರಿಗೂ ಉತ್ತಮ ಚಿಕಿತ್ಸೆ ನೀಡಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.