ಲಿಂಗಸುಗೂರು: ‘ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಅಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರಗಳು ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗುತ್ತಿಲ್ಲ’ ಎಂದು ಶಾಸಕ ಮಾನಪ್ಪ ವಜ್ಜಲ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಲಬುರ್ಗಿ ವಿಶ್ವ ವಿದ್ಯಾಲಯದ ಅಂತರ್ ವಿಶ್ವವಿದ್ಯಾಲಯಗಳ ಏಕವಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಕಾಲೇಜು ವಿದ್ಯಾರ್ಥಿ ಸಮೂಹ ದುಶ್ಚಟಗಳಿಂದ ದೂರವಿದ್ದು ಸ್ವಯಂ ಪ್ರೇರಿತರಾಗಿ ಕ್ರೀಡೆಯಲ್ಲಿ ಪ್ರತಿ ವರ್ಷ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ಹೆಚ್ಚಿಸಿದ್ದಾರೆ’ ಎಂದು ಪ್ರಶಂಸಿಸಿದರು.
‘ಗ್ರಾಮೀಣ ಮಟ್ಟದಲ್ಲಿ ಸೇರಿದಂತೆ ತಾಲ್ಲೂಕು ಕೇಂದ್ರದಲ್ಲಿ ಕೂಡ ಕ್ರೀಡಾಂಗಣದ ಅಥವಾ ಕ್ರೀಡಾ ತರಬೇತಿ ಕೊರತೆ ಮಧ್ಯೆ ಪ್ರಾಥಮಿಕ, ಪ್ರೌಢ, ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಜಿಲ್ಲೆ, ರಾಜ್ಯ, ವಿಶ್ವ ವಿದ್ಯಾಲಯ ಮಟ್ಟದಲ್ಲಿ ಸಾಧನೆ ಮೆರೆಯುತ್ತಿರುವುದು ಹರ್ಷದ ಸಂಗತಿ. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಮಹಾಂತಗೌಡ ಪಾಟೀಲ ಮಾತನಾಡಿ, ‘ ಕಾಲೇಜು ವಿದ್ಯಾರ್ಥಿಗಳು ಪೂರಕ ಸೌಲಭ್ಯಗಳ ಕೊರತೆಗಳ ಮಧ್ಯೆ ಕಾಲೇಜು ಆರಂಭದಿಂದಲೂ ಈ ವರೆಗೆ ಪ್ರತಿ ವರ್ಷ ಕೆಲ ಕ್ರೀಡೆಗಳಲ್ಲಿ ವಿಶ್ವ ವಿದ್ಯಾಲಯ ಮಟ್ಟ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಪ್ರತಿಭೆ ಮೆರೆದಿದ್ದು ಕಾಲೇಜಿನ ಹಿರಿಮೆ ಹೆಚ್ಚಿಸಿದೆ’ ಎಂದು ಬಣ್ಣಿಸಿದರು.
ಬೀದರ್ ಕಾಲೇಜಿನ ದೈಹಿಕ ನಿರ್ದೇಶಕ ಡಾ. ಮಾದಯ್ಯಸ್ವಾಮಿ, ಕಾಲೇಜಿನ ದೈಹಿಕ ನಿರ್ದೇಶಕ ಶಿವಾನಂದ ನರಹಟ್ಟಿ, ಉಪನ್ಯಾಸಕರಾದ ಪರಮಾನಂದ, ಮಹಾದೇವಪ್ಪ ನಾಗರಹಾಳ, ಶರಣಬಸವ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.