ರಾಯಚೂರು: ಕೆಪಿಎಂಇ ತಿದ್ದುಪಡಿ ಮಸೂದೆ ಜಾರಿ ಮಾಡುವುದನ್ನು ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿರುವ ಹೋರಾಟ ಮುಂದು
ವರಿಸಿದ್ದರಿಂದ ಬುಧವಾರವೂ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತವಾಗಿತ್ತು. ಇದರಿಂದ ರಿಮ್ಸ್ ಸರ್ಕಾರಿ ಆಸ್ಪತ್ರೆಯತ್ತ ರೋಗಿಗಳು ಧಾವಿಸುತ್ತಿರುವುದು ಕಂಡು ಬಂತು.
ಮಂಗಳವಾರ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಲಭ್ಯವಾಗಿತ್ತು. ಬುಧವಾರ ಏಕಾಏಕಿ ಬೆಳಿಗ್ಗೆ 8 ಗಂಟೆಯಿಂದ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲಾಯಿತು. ಇದರಿಂದ ಗ್ರಾಮೀಣ ಭಾಗದಿಂದ ಬಂದಿದ್ದ ಜನರು ಪರದಾಡಿದರು. ಕೊನೆಗೆ ಸರ್ಕಾರಿ ಆಸ್ಪತ್ರೆಗಳತ್ತ ಹೆಜ್ಜೆ ಹಾಕಿದರು.
ಜಿಲ್ಲೆಯ ಎಲ್ಲ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಸಮುದಾಯ ಆರೋಗ್ಯ ಕೇಂದ್ರ, ಹೆರಿಗೆ ಆಸ್ಪತ್ರೆಗಳು, ರಿಮ್ಸ್ ಭೋದಕ ಆಸ್ಪತ್ರೆಗಳಲ್ಲಿ ಹೆಚ್ಚಿನ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆದರು. ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಂಬಂಧಿಗಳು ನೆರೆದಿದ್ದರಿಂದ ಜನಜಂಗುಳಿ ಏರ್ಪಟ್ಟಿತ್ತು.
ಖಾಸಗಿ ಆಸ್ಪತ್ರೆಗಳ ಎದುರು ಆಸ್ಪತ್ರೆ ಬಂದ್ ಮಾಡಿದ ಬಗ್ಗೆ ಫಲಕಗಳನ್ನು ಹಾಕಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.