ರಾಯಚೂರು: ಪುರುಷ ಪ್ರಧಾನ ಧೋರಣೆಯಿಂದ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮಹಿಳೆಯರು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಎಐಎಂಎಸ್ಎಸ್ ರಾಜ್ಯ ಘಟಕ ಉಪಾಧ್ಯಕ್ಷೆ ಸೀಮಾ ದೇಶಪಾಂಡೆ ಹೇಳಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಘಟಕದದಿಂದ ಈಚೆಗೆ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಬೌದ್ಧಿಕ, ದೈಹಿಕ ಸಮಸ್ಯೆಗಳು ಎದುರಿಸಲು ಮಹಿಳೆಯರು ಪುರುಷ ಪ್ರಧಾನ ಧೋರಣೆಯ ವಿರುದ್ಧ ಹೋರಾಡಬೇಕು ಎಂದರು.
ಎಐಡಿವೈಒ ಜಿಲ್ಲಾ ಘಟಕ ಅಧ್ಯಕ್ಷ ಶರಣಪ್ಪ ಉದ್ಬಾಳ ಮಾತನಾಡಿ, ಮಹಿಳೆಯರನ್ನು ಭೋಗದ ವಸ್ತುವನ್ನಾಗಿ ಚಿತ್ರೀಕರಿಸುವ ಮೂಲಕ ಮಾರುಕಟ್ಟೆ ವಿಸ್ತರಿಸಿಕೊಳ್ಳುತ್ತಿರುವ ಬಹುರಾಷ್ಟ್ರೀಯ ಕಂಪೆನಿಗಳ ಹುನ್ನಾರ ಅರಿತು ಮಹಿಳೆಯರು ಜಾಗೃತರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎನ್. ಆರ್. ಬಾಗೋಜಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಯುವ ಜನತೆಯನ್ನು ದಾರಿತಪ್ಪಿಸುವ ಅಶ್ಲೀಲತೆಗೆ ಕಡಿವಾಣ ಹಾಕಬೇಕು ಎಂದರು.
ಚನ್ನಬಸವ ಜಾನೇಕಲ್ ಪ್ರಾಸ್ತಾವಿಕ ಮಾತನಾಡಿದರು. ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥೆ ಉಮಾ, ಕುಲಸಚಿವ ದೇವೇಂದ್ರಪ್ಪ, ಅಮೃತ್ ಮಹೂರ್ಕರ್ ಇದ್ದರು. ಉಪನ್ಯಾಸಕಿ ಸವಿತಾ ನಾಯಕ ಸ್ವಾಗತಿಸಿದರು. ಮುಕ್ತಾಂಬಿಕಾ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.