ADVERTISEMENT

ಮಾರಾಟಗಾರರಿಗೆ ತರಬೇತಿ ಉತ್ತಮ ಕೆಲಸ: ಶ್ಲಾಘನೆ

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣೆ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್‌

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2016, 12:58 IST
Last Updated 29 ಆಗಸ್ಟ್ 2016, 12:58 IST
ರಾಯಚೂರು ಕೃಷಿ ವಿ.ವಿ.ಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭಾನುವಾರ ನಡೆದ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣೆ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್‌ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಪಾಟೀಲ ಇಟಗಿ ಮಾತನಾಡಿದರು
ರಾಯಚೂರು ಕೃಷಿ ವಿ.ವಿ.ಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭಾನುವಾರ ನಡೆದ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣೆ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್‌ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಪಾಟೀಲ ಇಟಗಿ ಮಾತನಾಡಿದರು   

ರಾಯಚೂರು: ಕೃಷಿಯಲ್ಲಿನ ವಿನೂತನ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಬೇಸಾಯ ಕ್ರಮದ ಮಾಹಿತಿಯನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಪರಿಕರಗಳ ಮಾರಾಟಗಾರರ ಪಾತ್ರ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆಯು 46 ವಾರಗಳ ಡಿಪ್ಲೋಮಾ ಕೋರ್ಸ್‌ ನಡೆಸುತ್ತಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಪಾಟೀಲ ಇಟಗಿ ಹೇಳಿದರು.

ಕೃಷಿ ತಂತ್ರಜ್ಞರ ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ, ಕೃಷಿ ಇಲಾಖೆ ಸಹಯೋಗದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣೆ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್‌ ಅನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾರಾಟಗಾರರು ರೈತರಿಗೆ ಸರಿಯಾದ ಸಮಯದಲ್ಲಿ ಖಚಿತ ಮಾಹಿತಿಯನ್ನು ನೀಡುವಂತೆ ಅವರು ಕಿವಿಮಾತು ಹೇಳಿದರು.

ನವದೆಹಲಿಯ  ಭಾರತ ಕೃಷಿ ಅನುಸಂಧಾನ ಪರಿಷತ್‌ನ ಮಾನವ ಸಂಪನ್ಮೂಲ ವಿಭಾಗದ ಸಹಯಕ ಮಹಾನಿರ್ದೇಶಕ ಡಾ. ಎಂ. ಬಿ. ಚೆಟ್ಟಿ ಮಾತನಾಡಿ, ದೇಶದಲ್ಲಿ ಸುಮಾರು 55 ಸಾವಿರ ಕೃಷಿ ಪದವೀಧರರ ಅವಶ್ಯಕತೆ ಇದೆ. ಆದರೆ, ಒಟ್ಟು 73 ಕೃಷಿ ವಿಶ್ವವಿದ್ಯಾಲಯಗಳಿಂದ ಪ್ರತಿವರ್ಷ  25 ಸಾವಿರ ಪದವೀಧರರ ಮಾತ್ರ ಹೊರಬರುತ್ತಿದ್ದಾರೆ. ಆದ್ದರಿಂದ ದೇಶದಲ್ಲಿ ಕೃಷಿ ವಿ.ವಿ.ಗಳ ಸಂಖ್ಯೆ ಹೆಚ್ಚಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ವಿ.ವಿ. ಕುಲಪತಿ ಡಾ. ಪಿ. ಎಂ. ಸಾಲಿಮಠ ಮಾತನಾಡಿ, ಕೃಷಿಯಲ್ಲಿನ ಹೊಸ ಅವಿಷ್ಕಾರಗಳನ್ನು ತಿಳಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರ ಸೇವೆ ಬಹಳ ಅತ್ಯುತ್ಯಮವಾಗಿದೆ. ಮುಂದಿನ ದಿನಗಳಲ್ಲಿ ಆಹಾರದ ಭದ್ರತೆಗಾಗಿ ವಿಸ್ತರಣಾ ಚಟುವಟಿಕೆಗಳು ಚುರುಕಾಗಿ ಕಾರ್ಯಗತವಾಗಬೇಕೆಂದು ತಿಳಿಸಿದರು.

ಧಾರವಾಡದ ವಿಸ್ತರಣಾ ನಿರ್ದೇಶಕಡಾ. ವಿ. ಐ. ಬೆಣಗಿ ಮಾತನಾಡಿ, ಡಿಪ್ಲೋಮಾ ಕೋರ್ಸ್‌ನ ಮಹತ್ವದ ಬಗ್ಗೆ ತಿಳಿಸಿದರು.
ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಎಸ್.ಎಂ. ಸಿದ್ದಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಡಾ. ಎಸ್.ಎನ್. ವಾಸುದೇವನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ್‌, ಕೃಷಿ ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್‌.ಕೆ.ಮೇಟಿ, ಡಾ. ಶರಣಗೌಡ ಹಿರೇಗೌಡರ್ ಉಪಸ್ಥಿತರಿದ್ದರು.  ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 150 ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT