ರಾಯಚೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮಕ್ಕೆ ಬಂದಿದ್ದ ಮುಖ್ಯಮಂತ್ರಿಗೆ ಈಚೆಗೆ ಮನವಿ ಪತ್ರ ಸಲ್ಲಿಸಿದರು.
2009ರಿಂದ ಜಿಲ್ಲೆಯಲ್ಲಿ ನಿರಂತರ ವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮತ್ತೊಂದು ಕಡೆ ಬ್ಯಾಂಕುಗಳು ಸಾಲ ಪಾವತಿ ಮಾಡುವಂತೆ ನೋಟಿಸ್ ಜಾರಿ ಮಾಡುತ್ತಿವೆ. ಆದ್ದರಿಂದ ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಬಗರ್ ಹುಕುಂ ಸಾಗುವಳಿದಾರರ ಮೇಲೆ ಹೂಡಿರುವ ಮೊಕದ್ದಮೆ ಹಿಂಪಡೆದು, ರೈತರಿಗೆ ಹಕ್ಕು ಪತ್ರ ವಿತರಿಸಬೇಕು. ತೊಗರಿ ಕೇಂದ್ರದಲ್ಲಿ ನಡೆದಿರುವ ಅವ್ಯವಹಾರವನ್ನು ಸರಿಪಡಿಸಿ ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಕೃಷಿ ಪಂಪ್ಸೆಟ್ಗಳಿಗೆ ಹಗಲಿನಲ್ಲಿ 12 ತಾಸು 3ಫೇಸ್ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿದರು.
ನಾರಾಯಣಪುರ ಬಲದಂಡೆ ಕಾಲವೆಯನ್ನು ಆಧುನೀಕರಣ ಮಾಡ ಬೇಕು. ವಾರಬಂದಿ ನಿಲ್ಲಿಸಿ ಮಾರ್ಚ್ 31ರವರೆಗೆ ನೀರು ಸರಬರಾಜು ಮಾಡಬೇಕು. ತುಂಗಭದ್ರ ಎಡದಂಡೆ ಕಾಲುವೆಯ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಬೇಕು. ಏತ ನೀರಾವರಿ ಯೋಜನೆ ಅನುಷ್ಠಾನ ಗೊಳಿಸಬೇಕು.
ದೇವದುರ್ಗ ಹಾಗೂ ರಾಯಚೂರು ಎಪಿಎಂಸಿಗೆ ನಾಮಕರಣ ನಡೆಸದೆ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದರು. ಅಧ್ಯಕ್ಷ ಲಕ್ಷ್ಮಣಗೌಡ, ಅಮರಣ್ಣ ಗುಡಿಹಾಳ, ಮಲ್ಲಣ್ಣ ದಿನ್ನಿ, ವೀರನಗೌಡ, ಬೂದಯ್ಯಸ್ವಾಮಿ, ಶಿವನಗೌಡ ಇತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.