ರಾಯಚೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನ್ಯಾಯಾಧೀಶೆಯೊಂದಿಗೆ ಅನುಚಿತ ವರ್ತನೆ ಮಾಡಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಶನಿವಾರ ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ರ್ಯಾಲಿ ನಡೆಸಿದ ವಕೀಲರು, ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿ, ಅನುಚಿತ ವರ್ತನೆ ತೋರಿದ ಪೊಲೀಸ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪೊಲೀಸರ ದೌರ್ಜನ್ಯ ಹೆಚ್ಚುತ್ತಿದ್ದು, ಬಡ ಜನರ ಮೇಲೆ ಸವಾರಿ ಮಾಡುತ್ತಿದ್ದಾರೆ. ಜೆಎಂಎಫ್ಸಿ ನ್ಯಾಯಾಧೀಶೆ ಶಶಿಕಲಾ ಅವರನ್ನು ದಿಗ್ಬಂಧನ ಮಾಡಿದ ಪೋಲಿಸರು ಕಾನೂನು ಮೀರಿ ನಡೆದುಕೊಂಡಿದ್ದಾರೆ ಎಂದು ದೂರಿದರು.
ನ್ಯಾಯಾಧೀಶರಿಗೆ, ವಕೀಲರಿಗೆ ಹಾಗೂ ಸಾಮಾನ್ಯ ಜನರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.
ಮಾನವ ಹಕ್ಕುಗಳ ಉಲ್ಲಂಘನೆ ಆಗಿರುವುದು ಗಂಭೀರವಾಗಿ ಪರಿಗಣಿಸಿ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ವಿ.ಎಸ್.ಪಾಟೀಲ, ಪ್ರಧಾನ ಕಾರ್ಯದರ್ಶಿ ವೀರಭದ್ರ, ಎನ್.ಶಿವಶಂಕರ, ಮಹಾದೇವ, ಶ್ರೀಕಾಂತ, ಭಾನುರಾಜ ಇತರರು ಭಾಗವಹಿಸಿದ್ದರು.
*
ಮುಖ್ಯಾಂಶಗಳು:
* ಮಾನವ ಹಕ್ಕುಗಳ ಉಲ್ಲಂಘನೆ
* ರಕ್ಷಣೆ ನೀಡಲು ಮನವಿ
* ಪೊಲೀಸರ ಕ್ರಮಕ್ಕೆ ಖಂಡನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.