ಚನ್ನಪಟ್ಟಣ: ತಾಲ್ಲೂಕಿನ ಶ್ಯಾನುಭೋಗನಹಳ್ಳಿ ಗ್ರಾಮದಲ್ಲಿ ಮೂರು ಕಾಡಾನೆಗಳು ಭಾನುವಾರ ರಾತ್ರಿ ದಾಳಿ ನಡೆಸಿ ಎರಡು ಎಕರೆಯಲ್ಲಿ ಬೆಳೆದಿದ್ದ ಭತ್ತದ ಬೆಳೆಯನ್ನು ಧ್ವಂಸಗೊಳಿಸಿವೆ.
ರೈತ ಮಾದೇವ ಬೆಳೆದಿದ್ದ ಭತ್ತದ ಬೆಳೆ ಧ್ವಂಸವಾಗಿದ್ದು, ಘಟನೆಯಲ್ಲಿ ₹50 ಸಾವಿರಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಗ್ರಾಮದಲ್ಲಿ ಹಲವಾರು ರೈತರ ಬಾಳೆ, ತೆಂಗಿನ ಸಸಿಗಳು, ಪರಂಗಿ ಬೆಳೆ, ರಾಗಿ ಮುಂತಾದವುಗಳ ಮೇಲೂ ಕಾಡಾನೆಗಳು ದಾಳಿ ನಡೆಸಿವೆ.
ಗ್ರಾಮದ ಹೊರವಲಯದ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಬೀಡು ಬಿಟ್ಟಿರುವ ಆನೆಗಳು ಹಗಲಿನ ವೇಳೆಯಲ್ಲಿ ಬೆಟ್ಟದಲ್ಲಿದ್ದು, ಸಂಜೆಯಾಗುತ್ತಲೇ ಹೊರಗೆ ಬಂದು ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳೆ ನಷ್ಟಕ್ಕೆ ಪರಿಹಾರವೂ ಸಿಗುತ್ತಿಲ್ಲ. ಇದರಿಂದ ಈ ಭಾಗದ ರೈತರು ಕಂಗಾಲಾಗುವಂತಾಗಿದೆ ಎಂದು ಮುಖಂಡ ನಾಗರಾಜು ವಿವರಿಸುತ್ತಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟಲು ಶಾಶ್ವತ ಪರಿಹಾರ ಕೈಗೊಳ್ಳಬೇಕು. ಈ ಭಾಗದ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.