ADVERTISEMENT

ಆರು ಮನೆಗಳಲ್ಲಿ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2017, 7:10 IST
Last Updated 2 ಮಾರ್ಚ್ 2017, 7:10 IST
ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡ ಚಿನ್ನಾಭರಣ, ಬೆಳ್ಳಿ ಸಾಮಗ್ರಿ
ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡ ಚಿನ್ನಾಭರಣ, ಬೆಳ್ಳಿ ಸಾಮಗ್ರಿ   

ರಾಮನಗರ: ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆರು ಮನೆಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ.
‘ಮಾಗಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಜಗದೀಶ್ ಕುಮಾರ್ ಅಲಿಯಾಸ್ ಜಗ್ಗ , ಬೆಂಗಳೂರಿನ ವಿನಾಯಕ ನಗರದ ನಾಗರಾಜ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಹಾತೂರು ಗ್ರಾಮದ ಉದಯ್ ಅಲಿಯಾಸ್ ನೀರ್ ಮಜ್ಜಿಗೆ ಬಂಧಿತರು.

ಇವರಿಂದ ಒಟ್ಟು 517 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ಹಾಗೂ ಒಂದು ಏರ್ ಗನ್ ವಶಪಡಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ. ರಮೇಶ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಈ ಮೂವರು ಆರೋಪಿಗಳ ವಿರುದ್ಧ ಈ ಹಿಂದೆಯೂ ರಾಮನಗರ ಹಾಗೂ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ನಾಲ್ಕಾರು ಪ್ರಕರಣಗಳು ದಾಖಲಾಗಿವೆ. ಮನೆಗಳಲ್ಲಿ ಕಳವು ಮಾಡಿದ ಚಿನ್ನಾಭರಣಗಳನ್ನು ಆರೋಪಿಗಳು ವಿವಿಧ ಮಳಿಗೆಗಳಲ್ಲಿ ಅಡಮಾವಿಟ್ಟು ಹಣ ಪಡೆಯುತ್ತಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆದಿದೆ’ ಎಂದು ಅವರು ವಿವರಿಸಿದರು.

ಡಿವೈಎಸ್ಪಿ ಲಕ್ಷ್ಮಿಗಣೇಶ್ ನೇತೃತ್ವದಲ್ಲಿ ಆರೋಪಿಗಳನ್ನು ಪತ್ತೆ ಮಾಡಿದ ಬ್ಯಾಡರಹಳ್ಳಿ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ಗಳಾದ ರವಿಕುಮಾರ್, ಡಿ.ದಾಳೇಗೌಡ, ಎಸ್‌. ಮಂಜೇಗೌಡ ಹಾಗೂ ಸಿಬ್ಬಂದಿಯಾದ ಎಂ.ಎನ್ .ಮಂಜುನಾಥ್ , ಉಮೇಶ್ , ಪಿ.ಆರ್ .ಮಂಜುನಾಥ, ಪ್ರಭಾಕರ್ , ವೀರೇಶ್, ಲವಕುಮಾರ್, ಭೈರಪ್ಪ, ಎಚ್.ಸಿ. ರಾಜು ಅವರನ್ನು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.